ಮಂಡ್ಯ: 'ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ರಾಜ್ಯ ರಾಜಕಾರಣಕ್ಕೆ ಬರಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು’ ಎಂದು ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ನಿರ್ದೇಶಕ ಎಂ.ಆರ್.ಶಶಿಕುಮಾರ್ ಒತ್ತಾಯಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಮ್ಯಾ ಸಂಸದೆಯಾಗಿದ್ದ ಅಲ್ಪ ಅವಧಿಯಲ್ಲಿ ಉತ್ತಮವಾಗಿ ಜನಪರ ಕೆಲಸ ಮಾಡಿದ್ದಾರೆ. ಹಲವಾರು ಅಭಿವೃದ್ಧಿ ಯೋಜನೆ ಜಾರಿಗೆ ತಂದು ಹೆಸರು ಗಳಿಸದ್ದಾರೆ. ಕೇಂದ್ರೀಯ ವಿದ್ಯಾಲಯ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆರಂಭ, ಮೈಷುಗರ್ ಹಾಗೂ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಶ್ರಮಿಸಿದ್ದಾರೆ. ಕ್ಯಾನ್ಸರ್ ಆಸ್ಪತ್ರೆಗೆ ₹ 48 ಕೋಟಿ ಅನುದಾನ, ಮೆಡಿಕಲ್ ಕಾಲೇಜಿನ ಡಯಾಲಿಸಿಸ್ ಯಂತ್ರ ನೀಡಿದ್ದಾರೆ. ಜಿಲ್ಲೆಯ ಅಭಿವೃದ್ಧಿ, ರೈತರ ಸಮಸ್ಯೆ ಕುರಿತು ಸಂಸಸ್ನಲ್ಲಿ ಚರ್ಚೆ ನಡೆಸಿದ್ದಾರೆ’ ಎಂದು ಹೇಳಿದರು.
’ಜಿಲ್ಲೆಯ ಜನರ ಬಗ್ಗೆ ರಮ್ಯಾ ಅವರಿಗೆ ಅಪಾರ ಕಾಳಜಿ ಇದೆ. ಅಲ್ಲದೆ, ಜಿಲ್ಲೆಯ ಜನರೂ ರಮ್ಯಾ ಅವರ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ಅವರು ರಾಜ್ಯ ಕಾರಣಕ್ಕೆ ಬಂದು, ಮಂಡ್ಯ ಕ್ಷೇತ್ರ ಅಥವಾ ಜಿಲ್ಲೆಯ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸಬೇಕು’ ಎಂದು ಹೇಳಿದರು. ಗೋಷ್ಠಿಯಲ್ಲಿ ನಟರಾಜ್, ರಾಜೇಶ್, ನಾಗರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.