ADVERTISEMENT

ಶಾಸಕರ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2011, 9:35 IST
Last Updated 8 ಅಕ್ಟೋಬರ್ 2011, 9:35 IST

ಪಾಂಡವಪುರ: ಮೇಲುಕೋಟೆ ಕ್ಷೇತ್ರದಲ್ಲಿ ಸಮರ್ಪಕವಾಗಿ ಮಳೆಯಾಗದೆ ಇರುವುದರಿಂದ ಈ ಕ್ಷೇತ್ರವನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಶಾಸಕ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮೇಲುಕೋಟೆಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಗ್ರಾಮ ಪಂಚಾಯಿತಿ ಮುಂದೆ ಜಮಾವಣೆಗೊಂಡ ಕಾರ್ಯಕರ್ತರು, ಸರ್ಕಾರ ರಾಜ್ಯದಲ್ಲಿ 70 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದು, ಮೇಲುಕೋಟೆ ಕ್ಷೇತ್ರವನ್ನು ಕೈಬಿಟ್ಟು ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜಿಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

 ಶಾಸಕ ಪುಟ್ಟರಾಜು ಮಾತನಾಡಿ `ಮೇಲುಕೋಟೆ ಕ್ಷೇತ್ರದ ಅನೇಕ ಭಾಗಗಳು ಮಳೆಯಾಶ್ರಿತ ಪ್ರದೇಶಗಳಾಗಿದ್ದು, ಈ ಬಾರಿ ಸಮರ್ಪಕವಾಗಿ ಮಳೆಯಾಗದೆ ದನಕರುಗಳಿಗೆ ಮೇವಿಲ್ಲದಂತಾಗಿದೆ. ಇದರಿಂದ ಜಾನುವಾರುಗಳು ಬವಣೆ ಪಡುತ್ತಿವೆ. ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಬಿಜೆಪಿ ಸರ್ಕಾರ ಈ ಕ್ಷೇತ್ರವನ್ನು ಮಲತಾಯಿಯಂತೆ ನೋಡುತ್ತಿದೆ~ ಎಂದು ಆರೋಪಿಸಿದರು.

ಜಿಲ್ಲಾಡಳಿತ ಕೂಡಲೇ ಕ್ರಮಕೈಗೊಳ್ಳಬೇಕು ಇಲ್ಲದಿದ್ದರೆ ಈ ಭಾಗದ ರೈತರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸಲಾಗುವುದು ಎಂದರು.

ತಾ.ಪಂ.ಸದಸ್ಯ ಶಾಮಣ್ಣ, ಗ್ರಾ.ಪಂ.ಅಧ್ಯಕ್ಷೆ ಮಣಿಮುರುಗನ್, ಮುಖಂಡರಾದ ಮಲ್ಲೇಶ್, ರಾಮಚಂದ್ರ, ಪುಟ್ಟಣ್ಣ, ಬೆಟ್ಟಸ್ವಾಮಿಗೌಡ, ಯೋಗನರಸಿಂಹಗೌಡ, ಎಂ.ಬಿ.ಶ್ರೀನಿವಾಸ್ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.