ADVERTISEMENT

ಶಿವಣ್ಣಗೆ ಕೈತಪ್ಪಿದ ಬಿಜೆಪಿ ಟಿಕೆಟ್‌: ಹೊಸ ಮುಖಕ್ಕೆ ಮಣೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 10:17 IST
Last Updated 21 ಏಪ್ರಿಲ್ 2018, 10:17 IST

ಮಂಡ್ಯ: ‘ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕಂಡೂ ಕೇಳಲರಿಯದ ಮುಖಂಡರಿಗೆ ಬಿಜೆಪಿ ಟಿಕೆಟ್‌ ನೀಡಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಘೋಷಣೆ ಮಾಡಿದ್ದರು. ಆದರೆ ಯಾರೂ ಕೇಳದ ಹೊಸ ಹೆಸರು, ಮುಖಗಳಿಗೆ ಮಣೆ ಹಾಕಿದ್ದು ಜಿಲ್ಲೆಯಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಜಿಲ್ಲಾ ಪಂಚಾಯಿತಿ ಸದಸ್ಯ ಎನ್‌.ಶಿವಣ್ಣ ಜೆಡಿಎಸ್‌ ತ್ಯಜಿಸಿ ಕಳೆದ ವಾರವಷ್ಟೇ ಬಿಜೆಪಿ ಸೇರಿದ್ದರು. ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿತವಾಗಿತ್ತು. ಅವರ ಪರವಾಗಿ ಪಕ್ಷದ ಹಿರಿಯ ಮುಖಂಡ ಎಸ್‌.ಎಂ.ಕೃಷ್ಣ ಪತ್ರ ಬರೆದಿದ್ದಾರೆ. ಹೀಗಾಗಿ ಅವರೇ ಅಭ್ಯರ್ಥಿಯಾಗುತ್ತಾರೆ ಎನ್ನಲಾಗಿತ್ತು.

ಆದರೆ ಶುಕ್ರವಾರ ಪ್ರಕಟವಾಗಿರುವ ಬಿಜೆಪಿ ಪಟ್ಟಿಯಲ್ಲಿ ಎನ್‌.ಶಿವಣ್ಣ ಹೆಸರಿಲ್ಲ.ಮುಡಾ ಅಧ್ಯಕ್ಷರಾಗಿದ್ದ ಬಿ.ಬಸವೇಗೌಡ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದ್ದು ಆಶ್ಚರ್ಯಕ್ಕೆ ಕಾರಣವಾಗಿದೆ.

ADVERTISEMENT

ಮದ್ದೂರು ಕ್ಷೇತ್ರದಲ್ಲಿ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಲಕ್ಷ್ಮಣ್‌ ಕುಮಾರ್‌ ಅವರಿಗೆ ಟಿಕೆಟ್‌ ದೊರೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಹೊಸ ಮುಖ ಸತೀಶ್‌ ಅವರ ಹೆಸರು ಘೋಷಣೆಯಾಗಿದೆ. ಅರ್ಜಿ ಸಲ್ಲಿಸದ, ಹೆಸರು ಮುನ್ನೆಲೆಯಲ್ಲಿ ಇಲ್ಲದ ವ್ಯಕ್ತಿಗೆ ಟಿಕೆಟ್‌ ನೀಡಿರುವುದು ಮದ್ದೂರಿನಲ್ಲಿ ಆಶ್ಚರ್ಯ ಸೃಷ್ಟಿಸಿದೆ.

ಲಕ್ಷ್ಮಣ್‌ ಕುಮಾರ್‌ ಬೆಂಬಲಿಗರು ಇದರ ವಿರುದ್ಧ ಪ್ರತಿಭಟನೆ ನಡೆಸಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲೂ ಸ್ಪರ್ಧಿಸಿದ್ದ ಬೆಳ್ಳೂರಿನ ವೈದ್ಯ ಡಾ.ವಿ.ಪಾರ್ಥಸಾರಥಿ ಗೌಡ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಡಿ.ಹಲಗೇಗೌಡ ಅವರು ಪುತ್ರ ಎಚ್‌.ಮಂಜುನಾಥ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಅವರು ಈಚೆಗಷ್ಟೇ ಬಿಜೆಪಿ ಸೇರಿದ್ದರು. ಸಮ್ಮೋಹಿನಿ ತಜ್ಞ ಬಾಲಕೃಷ್ಣ ಗುರೂಜಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು.

ಕೆ.ಆರ್‌.ಪೇಟೆ ಕ್ಷೇತ್ರದಿಂದ ಬೂಕಹಳ್ಳಿ ಮಂಜುನಾಥ್‌ ಅವರಿಗೆ ಬಿಜೆಪಿ ಟಿಕೆಟ್‌ ಸಿಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.