ಶ್ರೀರಂಗಪಟ್ಟಣ: ರಾಜ್ಯ ಸರ್ಕಾರ ಈಚೆಗೆ ಮಂಡಿಸಿದ ಬಜೆಟ್ನಲ್ಲಿ ಮಂಡ್ಯ ಜಿಲ್ಲೆಯ ಜೀವನಾಡಿಗಳಾದ ಮೈಷುಗರ್ ಹಾಗೂ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗಳಿಗೆ ಅನುದಾನ ನೀಡದೇ ಇರುವುದು ನಿರಾಸೆ ತಂದಿದೆ ಎಂದು ಕಾಂಗ್ರೆಸ್ ಮುಖಂಡರಾದ ದರಸಗುಪ್ಪೆ ಎನ್. ತಮ್ಮಣ್ಣ (ಶ್ರೀಧರ್), ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಕಬ್ಬು ಬೆಳೆಗಾರರು, ಕೂಲಿಕಾರರು, ಲಾರಿ, ಟ್ರ್ಯಾಕ್ಟರ್ಗಳ ಮಾಲೀಕರು ಹಾಗೂ ವ್ಯಾಪಾರಸ್ಥರು ಈ ಎರಡೂ ಕಾರ್ಖಾನೆಗಳನ್ನು ನೆಚ್ಚಿಕೊಂಡಿದ್ದಾರೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಲಕ್ಷಾಂತರ ಜನರು ಸಕ್ಕರೆ ಕಾರ್ಖಾನೆಗಳನ್ನು ಅವಲಂಬಿಸಿದ್ದಾರೆ. ಆದರೆ ಎರಡೂ ಕಾರ್ಖಾನೆಗಳು ಆರ್ಥಿಕವಾಗಿ ಸಂಕಷ್ಟದಲ್ಲಿವೆ.
ಹಾಗಾಗಿ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸಿನ ನೆರವು ನೀಡಬೇಕು. ದಕ್ಷ ವ್ಯವಸ್ಥಾಪಕ ನಿರ್ದೇಶಕರನ್ನು ಕಾರ್ಖಾನೆಗಳಿಗೆ ನಿಯೋಜಿಸಿ ಪುನಶ್ಚೇತನ ನೀಡಬೇಕು ಎಂದು ಕೋರಿದ್ದಾರೆ. ಈ ಹಿಂದಿನ ಸರ್ಕಾರಗಳು ಸಕ್ಕರೆ ಕಾರ್ಖಾನೆಗಳಿಗೆ ನೀಡಿದ ಅನುದಾನ ಸಮರ್ಪಕವಾಗಿ ಬಳಕೆ ಆಗಿಲ್ಲ. ರಾಜಕೀಯ ಕಾರಣಗಳಿಂದ ಕಾರ್ಖಾನೆಗಳನ್ನು ನಿರ್ಲಕ್ಷಿಸಲಾಗಿದೆ.
ಪರಿಣಾಮ ರೈತರು ಆತಂಕ ಎದುರಿಸುವ ಸ್ಥಿತಿ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಈ ಕಾರ್ಖಾನೆಗಳಿಗೆ ಅಗತ್ಯ ನೆರವು ಕೊಡಿಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.