ADVERTISEMENT

ಸಮನ್ವಯತೆ ಸಾಧಿಸಿ; ಸಮಸ್ಯೆ ಪರಿಹರಿಸಿ

ಮರಿಲಿಂಗನದೊಡ್ಡಿಯಲ್ಲಿ ಡಿವೈಎಸ್ಪಿ ಗಂಗಾಧರಸ್ವಾಮಿ ಗ್ರಾಮ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 26 ಜೂನ್ 2019, 18:22 IST
Last Updated 26 ಜೂನ್ 2019, 18:22 IST

ಕೆರಗೋಡು: ‘ಕಾನೂನು ವ್ಯಾಪ್ತಿಯಲ್ಲಿ ಇತರೆ ಇಲಾಖೆಗಳ ಜತೆ ಸಮನ್ವಯತೆ ಸಾಧಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲಾಗುವುದು’ ಎಂದು ಡಿವೈಎಸ್ಪಿ ಗಂಗಾಧರಸ್ವಾಮಿ ಭರವಸೆ ನೀಡಿದರು.

ಇಲ್ಲಿಗೆ ಸಮೀಪದ ಮರಿಲಿಂಗನದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಂಗಳವಾರ ನಡೆದ ಗ್ರಾಮ ವಾಸ್ತವ್ಯದಲ್ಲಿ ಮಾತನಾಡಿದ ಅವರು, ‘ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು. ಅಪರಾಧ ಕೃತ್ಯಗಳು ನಡೆದರೆ ಶಿಕ್ಷೆ ಖಂಡಿತ. ಆದ ಕಾರಣ ತಪ್ಪು ದಾರಿಗೆ ಇಳಿಯದೇ ಎಲ್ಲರೂ ಕಾನೂನನ್ನು ಗೌರವಿಸುವ ಮೂಲಕ ನೆಮ್ಮದಿ ಜೀವನ ನಡೆಸಬೇಕು’ ಎಂದರು.

ಸರ್ಕಾರದ ಸೂಚನೆಯನ್ವಯ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಇಲಾಖೆಗಳ ಮೂಲಕ ಪರಿಶೀಲಿಸಿ ಗ್ರಾಮದ ಸಮಸ್ಯೆಗಳನ್ನು ಪರಿಹರಿಸಲು ಯತ್ನಿಸಲಾಗುವುದು ಎಂದರು.

ADVERTISEMENT

ಇದೇ ಸಂದರ್ಭದಲ್ಲಿ ಸಾರ್ವಜನಿಕರು ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ, ಅಂಗವಿಕಲ ವೇತನ ಬಾರದಿರುವುದು, ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಗೂ ಬೀದಿ ದೀಪಗಳನ್ನು ಹಾಕಿಸುವುದು, ಇತರೆ ಇಲಾಖೆಯ ಅಧಿಕಾರಿಗಳು ಕಡ್ಡಾಯ ಹಾಜರಿ ಸೇರಿದಂತೆ ಹಲವು ಅಹವಾಲುಗಳನ್ನು ಸಲ್ಲಿಸಿದರು.

ಗ್ರಾಮಾಂತರ ವೃತ್ತ ನಿರೀಕ್ಷಕ ನೇಮಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಬಿ.ಉಷಾ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಸಿ.ಪ್ರಶಾಂತ್‌ಬಾಬು, ಗ್ರಾಮ ಪಂಚಾಯಿತಿ ಸದಸ್ಯರಾದ ರಾಮಣ್ಣ, ರಾಜು, ಕೆರಗೋಡು ಠಾಣೆಯ ಎಎಸ್‌ಐಗಳಾದ ಮಲ್ಲಿಕಾರ್ಜುನ, ಮಹಾದೇವೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.