ನಾಗಮಂಗಲ: ರೈತರು ಕೃಷಿಯ ಜತೆಗೆ ಹೈನುಗಾರಿಕೆಯಲ್ಲಿ ತೊಡಗುವುದರಿಂದ ಆರ್ಥಿಕವಾಗಿ ಅಭಿವೃದ್ಧಿಯಾಗಬಹುದು ಎಂದು ಶಾಸಕ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.
ಈಚೆಗೆ ತಾಲ್ಲೂಕಿನ ಹೊಣಕೆರೆ ಹೋಬಳಿಯ ಗೊಟಕಹಳ್ಳಿಯಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮನ್ಮುಲ್ ನಿರ್ದೇಶಕ ತಟ್ಟಹಳ್ಳಿ ನರಸಿಂಹಮೂರ್ತಿ ಮಾತನಾಡಿ, ರೈತರು ಒಕ್ಕೂಟಕ್ಕೆ ಗುಣಮಟ್ಟದ ಹಾಲನ್ನು ನೀಡಿದರೆ ಉತ್ತಮ ಬೆಲೆ ದೊರೆಯುತ್ತದೆ. ಜತೆಗೆ ಒಕ್ಕೂಟವು ಸುಗಮವಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಚಿಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯರಾಮು, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕೆ.ಪಿ. ಶಿವನಂಜೇಗೌಡ, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಹೊಸೂರು ಕೃಷ್ಣೇಗೌಡ, ಮುಖಂಡರಾದ ಬಲರಾಮ, ಕೃಷ್ಣೇಗೌಡ, ರಾಮಚಂದ್ರ ಇದ್ದರು.
ಕೆರೆಗೆ ನೀರು ತುಂಬಿಸಲು ಒತ್ತಾಯ: ಪ್ರತಿಭಟನೆ
ಕೃಷ್ಣರಾಜಪೇಟೆ: ಗ್ರಾಮಗಳ ಕೆರೆಕಟ್ಟೆ ಗಳಿಗೆ ಹೇಮಾವತಿ ನಾಲೆಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ಹೆಗ್ಗಡಹಳ್ಳಿ, ಕರೋಟಿ, ಕುಂದನಹಳ್ಳಿ ಗ್ರಾಮಸ್ಥರು ಪಟ್ಟಣದ ಹೇಮಾವತಿ ಜಲಾಶಯ ಯೋಜನೆಯ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಶಾಸಕರ ಭೇಟಿ: ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಬಂದ ಶಾಸಕ ಕೆ.ಸಿ. ನಾರಾಯಣಗೌಡ ಜನರ ಸಮಸ್ಯೆ ಆಲಿಸಿದರು. ತಕ್ಷಣ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿ ಗಳಿಗೆ ಸೂಚಿಸಿದರು. ಒಂದೆರಡು ದಿನಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಭರವಸೆ ದೊರಕಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.