ADVERTISEMENT

8 ಕೆ.ಜಿ ಗಾಂಜಾ ವಶ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 1 ಜನವರಿ 2018, 9:00 IST
Last Updated 1 ಜನವರಿ 2018, 9:00 IST

ಕೃಷ್ಣರಾಜಪೇಟೆ: ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ ಭಾನುವಾರ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 8 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮುರುಕನಹಳ್ಳಿಯ ಗುರುರಾಜು(40), ಪಾಂಡವಪುರದ ರಂಗೇಗೌಡ (54) ಬಂಧಿತರು. ಸರ್ಕಲ್ ಇನ್‌ಸ್ಪೆಕ್ಟರ್‌ ಎಚ್‌.ಬಿ.ವೆಂಕಟೇಶಯ್ಯ ಅವರು ನೇತೃತ್ವದ ತಂಡ ಭಾನುವಾರ ಖಚಿತ ಮಾಹಿತಿ ಮೇರೆಗೆ ತೋಟದ ಮನೆಗೆ ದಾಳಿ ನಡೆಸಿದೆ. ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 8 ಕೆ.ಜಿ ಗಾಂಜಾಸೊಪ್ಪು ಪತ್ತೆಯಾಗಿದೆ. ಹೊಸವರ್ಷದ ಸಂಭ್ರಮಾಚರಣೆ ನಡೆಸುವ ಯುವಜನರಿಗೆ ಮಾರಾಟ ಮಾಡಲು ತಂದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಮಾರುವೇಷದ ಕಾರ್ಯಾಚರಣೆ: ನಾಗಮಂಗಲ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಮಾರುವೇಷ ಧರಿಸಿ ಗಾಂಜಾ ಕೊಳ್ಳುವವರಂತೆ ಹೋಗಿದ್ದ ಪೋಲಿಸರು ಮಾರಾಟ ಜಾಲ ಪತ್ತೆ ಮಾಡಿದ್ದಾರೆ. ಆರೋಪಿಗಳನ್ನು ಮಂಡ್ಯ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿಸಲಾಯಿತು. ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.