ADVERTISEMENT

ಅಂಬರೀಷ್ ನೇತೃತ್ವದಲ್ಲಿ ಚುನಾವಣೆ: ರಮೇಶ ಬಂಡಿಸಿದ್ದೇಗೌಡ

​ಪ್ರಜಾವಾಣಿ ವಾರ್ತೆ
Published 9 ಜನವರಿ 2018, 5:11 IST
Last Updated 9 ಜನವರಿ 2018, 5:11 IST

ಶ್ರೀರಂಗಪಟ್ಟಣ: ‘ಶೀಘ್ರವೇ ಕಾಂಗ್ರೆಸ್‌ ಪಕ್ಷ ಸೇರಲಿದ್ದು, ಮಂಡ್ಯ ಶಾಸಕ ಹಾಗೂ ಹಿರಿಯ ನಟ ಅಂಬರೀಷ್ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದಲ್ಲಿ ಚುನಾವಣೆ ಎದುರಿಸುತ್ತೇನೆ’ ಎಂದು ಜೆಡಿಎಸ್‌ ಬಂಡಾಯ ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಲ್ಯಾಪ್‌ಟಾಪ್‌ ವಿತರಣಾ ಕಾರ್ಯಕ್ರಮದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘2008ರಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ನಾನು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಅಂಬರೀಷ್ ಅವರ ವಿರುದ್ಧ ಜಯಗಳಿಸಿದ್ದೆ. 2013ರಲ್ಲಿ ಕೂಡ ಜೆಡಿಎಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದೇನೆ. ಸದ್ಯ ಕಾಂಗ್ರೆಸ್‌ ಪಕ್ಷ ಸೇರುತ್ತಿರುವುದರಿಂದ ಅಂಬರೀಷ್ ಅವರ ಮಾರ್ಗದರ್ಶನ ಪಡೆಯುತ್ತೇನೆ. ನಾನು ಅವರ ಅಭಿಮಾನಿಯಾಗಿದ್ದು. ಮುಂಬರುವ ಚುನಾವಣೆಯಲ್ಲಿ ನನ್ನ ಪರ ಪ್ರಚಾರ ಮಾಡಿಕೊಡುವಂತೆ ಅವರನ್ನು ಕೋರುತ್ತೇನೆ’ ಎಂದರು.

‘ಕ್ಷೇತ್ರದ ಕೊತ್ತತ್ತಿ ಹೋಬಳಿಯಿಂದ ಪ್ರತ್ಯೇಕ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ. ಸದ್ಯ ಕ್ಷೇತ್ರದ ಎಲ್ಲ ಗ್ರಾಮಗಳಲ್ಲಿ ಪ್ರವಾಸ ಮಾಡಿ ಬೆಂಬಲ ಕೋರುತ್ತಿದ್ದೇನೆ. ಸಕಾರಾತ್ಮಕ ಪ್ರತಿಕ್ರಿಯೆ ದೊರೆಯುತ್ತಿದೆ. ನಮ್ಮ ಕುಟುಂಬಕ್ಕೆ ಕಳೆದ 35 ವರ್ಷಗಳಿಂದ ಕ್ಷೇತ್ರದ ಜನರು ಆಶೀರ್ವಾದ ಮಾಡಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.