ಮಂಡ್ಯ: ‘ಮಹಿಳೆಯರು, ಯುವಕರು ಕೇಂದ್ರ ಪುರಸ್ಕೃತ ಯೋಜನೆಗಳ ಅರಿವು ಹೊಂದಿ ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ಮನ್ಸೂರ್ ಅಹಮದ್ ಜಮಾನ್ ಹೇಳಿದರು.
ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬುಧವಾರ ನೆಹರೂ ಯುವಕೇಂದ್ರ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ತರಬೇತಿ, ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಕೇಂದ್ರ ಸರ್ಕಾರ ಜಾರಿಗೊಳಿರುವ ಯೋಜನೆಗಳ ಲಾಭ ಪಡೆಯಬೇಕು. ದೇಶದಲ್ಲಿ ಉತ್ಪಾದನೆ, ಜನ–ಧನ ಉಳಿತಾಯ ಖಾತೆ, ಕೌಶಲ ಅಭಿವೃದ್ಧಿ ಮುಂತಾದ ಕ್ಷೇತ್ರಗಳ ಕಾರ್ಯಕ್ರಮಗಳ ಉಪಯೋಗ ಪಡೆಯಬೇಕು. ಮಹಿಳೆಯರು ಕಾನೂನುಗಳ ತಿಳಿವಳಿಕೆ ಹೊಂದಬೇಕು’ ಎಂದು ಹೇಳಿದರು.
‘ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಇಂತಹ ಸಂದರ್ಭದಲ್ಲಿ ಯಾವುದೇ ಅಂಜಿಕೆ ಇಲ್ಲದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಡಾ.ಎಸ್.ದಿವಾಕರ್, ರೋಟರಿ ಸಂಸ್ಥೆ ಅಧ್ಯಕ್ಷ ಎ.ಸಿ.ರಮೇಶ್, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ಎಚ್.ಆರ್.ಸುಧಾಮ ಜ್ಞಾನ ಸಿಂಧು ಸಂಸ್ಥೆ ಅಧ್ಯಕ್ಷ ಡಿ.ಎಸ್.ವಿಜಯ್ಕುಮಾರ್, ರಾಷ್ಟ್ರಯುವಪ್ರಶಸ್ತಿ ಪುರಸ್ಕೃತರಾದ ಬಿ.ಎಸ್.ಅನುಪಮಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.