ಕೆ.ಆರ್.ಪೇಟೆ: ಕೆ.ಎಸ್.ಪುಟ್ಟಣ್ಣಯ್ಯ ಶ್ರಮಿಕರ ಮತ್ತು ರೈತರ ಗಾಂಧಿಯಾಗಿದ್ದರು ಎಂದು ಜಿಲ್ಲಾ ರೈತ ಸಂಘದ ಮಾಜಿ ಅಧ್ಯಕ್ಷ ಮುದುಗೆರೆ ರಾಜೇಗೌಡ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್, ದಲಿತಪರ ಸಂಘಟನೆಗಳು, ಪತ್ರಕರ್ತರ ಸಂಘ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದ ಯಾವುದೇ ಮೂಲೆಯಲ್ಲಿ ರೈತರಿಗೆ ಅನ್ಯಾಯವಾದರೆ ತಕ್ಷಣ ಧ್ವನಿ ಎತ್ತುವ ಮೂಲಕ ರೈತರ ಧ್ವನಿಯಾಗಿದ್ದ ಪುಟ್ಟಣ್ಣಯ್ಯ ಅವರನ್ನು ಕಳೆದುಕೊಂಡು ನಾವು ಇಂದು ಅನಾಥರಾಗಿದ್ದೇವೆ ಎಂದರು.
ರಾಜ್ಯ ಉಪಾಧ್ಯಕ್ಷ ಮಂದಗೆರೆ ಜಯರಾಮು, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಹರಿಚರಣ್ ತಿಲಕ್, ಪ್ರಾಧ್ಯಾಪಕ ಉಮಾಶಂಕರ್ ಮಾತನಾಡಿದರು.
ಸಭೆಯಲ್ಲಿ ರಾಜ್ಯ ರೈತ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ನಂದಿನಿ ಜಯರಾಂ, ತಾಲ್ಲೂಕು ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ತಾಲ್ಲುಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಬಲ್ಲೇನಹಳ್ಳಿ ಮಂಜುನಾಥ್, ಮಾರೇನಹಳ್ಳಿ ಲೋಕೇಶ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.