ಮಂಡ್ಯ: ‘ಜೂನ್ 8ರಂದು ನಡೆಯಲಿರುವ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜಿಲ್ಲೆಯಲ್ಲಿ 9 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 4,859 ಮಂದಿ ಹಕ್ಕು ಚಲಾವಣೆ ಮಾಡಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಮೂಲ ಮತದಾರರು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಸ್ವೀಕೃತವಾದ ಅರ್ಜಿ ಸೇರಿಸಿ ಒಟ್ಟು 4,859 ಮತದಾರರಿದ್ದಾರೆ. ಜೂನ್ 8ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಮತ ಎಣಿಕೆ ಕಾರ್ಯವು ಜೂನ್ 12ರಂದು ಮೈಸೂರಿನಲ್ಲಿ ನಡೆಯಲಿದೆ. ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಮೇ 15 ರಿಂದ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆಯಾದರೆ ಕಾನೂನು ಕ್ರಮ ಜರುಗಿಸಲಾಗುವುದು. ನೀತಿ ಸಂಹಿತೆ ಉಲ್ಲಂಘನೆ ಹಾಗೂ ಚುನಾವಣೆ ಸಂಬಂಧ ಇತರ ದೂರುಗಳಿಗೆ ಕಂಟ್ರೊಲ್ ರೂಂ ತೆರೆಯಲಾಗಿದೆ’ ಎಂದು ಹೇಳಿದರು.
ಮಂಡ್ಯ ನಗರ ಸೇರಿ ತಾಲ್ಲೂಕಿನಲ್ಲಿ 3 ಮತಗಟ್ಟೆ, ಕೆ.ಆರ್.ಪೇಟೆ, ನಾಗಮಂಗಲ, ಪಾಂಡವಪುರ, ಮದ್ದೂರು, ಶ್ರೀರಂಗಪಟ್ಟಣ ಹಾಗೂ ಮಳವಳ್ಳಿ ತಾಲ್ಲೂಕುಗಳಲ್ಲಿ ತಲಾ ಒಂದು ಮತಗಟ್ಟೆಯಂತೆ 9 ಮತಗಟ್ಟೆ ಸ್ಥಾಪಿಸಲಾಗಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಯಾವುದೇ ಜಾಹೀರಾತು ಪ್ರಸಾರ ಮಾಡುವ ಮುನ್ನ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ (ಎಂ.ಸಿ.ಎಂ.ಸಿ) ಪೂರ್ವಾನುಮತಿ ಪಡೆಯುವುದು ಕಡ್ಡಾಯ’ ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಮಂಜುನಾಥ್, ಬಸವರಾಜು ಸೇರಿ ಹಾಜರಿದ್ದರು
ಕಂಟ್ರೊಲ್ ರೂಂ ದೂರವಾಣಿ ಸಂಖ್ಯೆ ವಿವರ
ಕೆ.ಆರ್.ಪೇಟೆ: 08230-262989, ನಾಗಮಂಗಲ: 08234-286034, ಪಾಂಡವಪುರ: 08236-255128, ಮಂಡ್ಯ:08232-231229, ಮದ್ದೂರು: 08232:232010, ಶ್ರೀರಂಗಪಟ್ಟಣ: 08236-252129 ಹಾಗೂ ಮಳವಳ್ಳಿ: 08231-243999
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.