
ಭಾರತೀನಗರ: ಸಮೀಪದ ಅಣ್ಣೂರು ಗ್ರಾಮದಲ್ಲಿ 16 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ನೀಲಗಿರಿ ತೋಪಿಗೆ ಮಂಗಳವಾರ ಆಕಸ್ಮಿಕ ಬೆಂಕಿ ತಗುಲಿದ್ದು, 6 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ನೂರಾರು ನೀಲಗಿರಿ ಮರಗಳು ಭಸ್ಮಗೊಂಡಿವೆ.
ಮಧ್ಯಾಹ್ನ 12ರ ಸುಮಾರಿಗೆ ನೀಲಗಿರಿ ತೋಪಿಗೆ ಬೆಂಕಿ ಬಿದ್ದಿದ್ದು, ಬೆಂಕಿ ತೀವ್ರತೆಗೆ ಗಗನದೆತ್ತರಕ್ಕೆ ಹೊಗೆ ಹರಡಿತ್ತು. ಇದನ್ನು ಕಂಡ ಅಕ್ಕಪಕ್ಕದ ಜಮೀನಿನ ರೈತರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಬಿಸಿಲು ಹೆಚ್ಚಿದ್ದರಿಂದ ಹಾಗೂ ತೋಪಿನಲ್ಲಿ ನೆಲದಲ್ಲಿ ಹರಡಿದ್ದ ಮರದ ಎಲೆಗಳಿಗೆ ಬೆಂಕಿ ಜ್ವಾಲೆ ಹರಡಿದ್ದರಿಂದ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ತಕ್ಷಣವೇ ಜಮೀನಿನ ಮಾಲೀಕರಾದ ಪುಟ್ಟೇಗೌಡ್ರು ಸಿದ್ದರಾಮು ಅವರಿಗೆ ವಿಚಾರ ಮುಟ್ಟಿಸಿದ್ದಾರೆ.
ಸಿದ್ದರಾಮು ಅವರು ಮದ್ದೂರಿನ ಅಗ್ನಿ ಶಾಮಕ ದಳಕ್ಕೆ ದೂರವಾಣಿ ಮೂಲಕ ವಿಷಯ ತಿಳಿಸಿದರು. ತಕ್ಷಣವೇ ಸ್ಥಳಕ್ಕೆ ಧಾವಿಸಿ 3 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಕಡೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
6 ಎಕರೆಗೂ ಹೆಚ್ಚು ಪ್ರದೇಶದಲ್ಲಿದ್ದ ₹5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಮರಗಳು ಬೆಂಕಿಯಲ್ಲಿ ಭಸ್ಮಗೊಂಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.