
ನಾಗಮಂಗಲ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಭಾನುವಾರ ರಾತ್ರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರ ಜ್ವಾಲಾಪೀಠಾರೋಹಣ ಮತ್ತು ಸಿದ್ಧಸಿಂಹಾಸನ ಪೂಜೆ ಅಪಾರ ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಕಾಲಭೈರವೇಶ್ವರಸ್ವಾಮಿಗೆ ಸುವರ್ಣ ಕವಚಾಲಂಕಾರ ಪೂಜೆ, ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆ ನೆರವೇರಿತು.
ಚಿನ್ನದ ಕಿರೀಟದೊಂದಿಗೆ ಸರ್ವಾಲಂಕಾರ ಭೂಷಿತರಾಗಿದ್ದ ನಿರ್ಮಲಾನಂದನಾಥ ಶ್ರೀಗಳು ಶ್ರೀಮಠದ ಸಿದ್ಧ ಸಿಂಹಾಸನವನ್ನೇರಿ ಭಕ್ತರಿಗೆ ದರ್ಶನ ನೀಡುವುದಕ್ಕೂ ಮುನ್ನ, ಸಹಸ್ರಾರು ಭಕ್ತರ ನಡುವೆ ಶ್ರೀಮಠದ ವಟುಗಳ ವೇದ ಘೋಷಗಳ ಝೇಂಕಾರದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದರು. ಕಾಲಭೈರವೇಶ್ವರಸ್ವಾಮಿ ಮತ್ತು ಪರಿವಾರ ದೇವತೆಗಳಿಗೆ ಪೂಜೆ ಸಲ್ಲಿಸಿದ ಬಳಿಕ ಸಿದ್ಧಸಿಂಹಾಸನ ರೂಢರಾಗಿ ದರ್ಶನ ನೀಡಿದರು.
ಅನ್ನ ದಾಸೋಹಕ್ಕೆ ಚಾಲನೆ: ಆದಿಚುಂಚನಗಿರಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಅಸಂಖ್ಯಾತ ಭಕ್ತರಿಗೆ ಕ್ಷೇತ್ರದ ವಿವಿಧ ಭಾಗಗಳಲ್ಲಿ 5 ಕೌಂಟರ್ಗಳಲ್ಲಿ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಟ್ಟದ ಮೇಲ್ಭಾಗದ ಗಂಗಾಧರೇಶ್ವರ ಅತಿಥಿ ಗೃಹದ ಬಳಿ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆ ದಾನಿಗಳಾದ ರಾಮಕೃಷ್ಣಪ್ಪ ದಂಪತಿ ಸ್ಥಾಪಿಸಿರುವ ದಾಸೋಹ ಕೌಂಟರ್ನಲ್ಲಿ ನಿರ್ಮಲಾನಂದನಾಥ ಶ್ರೀ ಪೂಜೆ ಸಲ್ಲಿಸಿ ಅನ್ನದಾಸೋಹಕ್ಕೆ ಚಾಲನೆ ನೀಡಿದರು. ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹಾಜರಿದ್ದರು.
ಶ್ರೀಕ್ಷೇತ್ರದ ನಿತ್ಯ ದಾಸೋಹ ಭವನದ ಜೊತೆಗೆ ತುರುವೇಕೆರೆ ಒಕ್ಕಲಿಗರ ಸಂಘದ ವತಿಯಿಂದ ಶಿವಶಕ್ತಿ ಸಮುದಾಯ ಭವನದ ಬಳಿ, ಭದ್ರಾವತಿ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಆದಿಶಕ್ತಿ ಸಮುದಾಯ ಭವನದ ಬಳಿ ಮತ್ತು ಬೆಂಗಳೂರಿನ ಕಾಲಭೈರವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅನ್ನ ಸಂತರ್ಪಣ ಸೇವಾ ಟ್ರಸ್ಟ್ ವತಿಯಿಂದ ಗಂಗಾಧರೇಶ್ವರ ಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಬಳಿ ಕೌಂಟರ್ ಸ್ಥಾಪಿಸಿ ಉಚಿತವಾಗಿ ಊಟ ತಿಂಡಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಜಾತ್ರೆ ಮುಗಿಯುವವರೆಗೂ ಅನ್ನದಾನ ನಡೆಯಲಿದೆ ಎಂದು ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.