ADVERTISEMENT

ಶ್ರೀರಂಗಪಟ್ಟಣ: ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 11 ಮೇ 2023, 14:40 IST
Last Updated 11 ಮೇ 2023, 14:40 IST
ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮತ್ತು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಗುರುವಾರ ಹಮ್ಮಿಕೊಂಡಿದ್ದ ಗರ್ಭಿಣಿಯರ ಆರೈಕೆ ತರಬೇತಿಯಲ್ಲಿ ಗರ್ಭಿಣಿಯರು ಪೌಷ್ಟಿಕ ಆಹಾರ ಕ್ರಮದ ಫಲಕ ಪ್ರದರ್ಶಿಸಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮತ್ತು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಗುರುವಾರ ಹಮ್ಮಿಕೊಂಡಿದ್ದ ಗರ್ಭಿಣಿಯರ ಆರೈಕೆ ತರಬೇತಿಯಲ್ಲಿ ಗರ್ಭಿಣಿಯರು ಪೌಷ್ಟಿಕ ಆಹಾರ ಕ್ರಮದ ಫಲಕ ಪ್ರದರ್ಶಿಸಿದರು   

ಶ್ರೀರಂಗಪಟ್ಟಣ: ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತ ಮಗು ಜನಿಸಬೇಕಾದರೆ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ.ಬೆನ್ನೂರ ಸಲಹೆ ನೀಡಿದರು.

ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮತ್ತು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಗುರುವಾರ ಹಮ್ಮಿಕೊಂಡಿದ್ದ ಗರ್ಭಿಣಿಯರ ಆರೈಕೆ ತರಬೇತಿಯಲ್ಲಿ ಅವರು ಮಾತನಾಡಿದರು.

ಆಹಾರದಲ್ಲಿ ಹಸಿರು ಸೊಪ್ಪು, ತರಕಾರಿಗಳು, ಹಣ್ಣು, ಮೊಳಕೆ ಕಾಳು ಇರಬೇಕು. ಹಾಲು, ಮೊಟ್ಟೆ, ಮೀನು ಸೇವಿಸಬೇಕು. ದೈಹಿಕ ಕ್ಷಮತೆ ಕಾಪಾಡಿಕೊಳ್ಳಲು ನಡಿಗೆ, ಸರಳ ವ್ಯಾಯಾಮ ಮಾಡಬೇಕು. ಮನಸ್ಸಿಗೆ ಉಲ್ಲಾಸ ತರುವ, ಗಾಳಿ ಮತ್ತು ಬೆಳಕು ಚೆನ್ನಾಗಿರುವ ಪರಿಸರದಲ್ಲಿ ವಾಸಿಸಬೇಕು. ಅಗತ್ಯಕ್ಕೆ ತಕ್ಕಂತೆ ಕಬ್ಬಿಣದ ಅಂಶಯುಕ್ತ ಮಾತ್ರೆಗಳನ್ನು ಸೇವಿಸಬೇಕು. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಆಯುಷ್‌ ವೈದ್ಯಾಧಿಕಾರಿ ಡಾ.ಮೃಣಾಲಿನಿ ಮಾತನಾಡಿ, ಗರ್ಭಿಣಿಯರು ಒತ್ತಡದಿಂದ ಮುಕ್ತರಾಗಿರಬೇಕಾದರೆ ಧ್ಯಾನ, ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಬೇಕು. ಆಪ್ತರ ಜತೆ ಮುಕ್ತವಾಗಿ ಚರ್ಚೆ ನಡೆಸಬೇಕು ಎಂದರು.

ಸರಳ ವ್ಯಾಯಾಮದ ಪ್ರಾತ್ಯಕ್ಷೆಯನ್ನೂ ಅವರು ನೀಡಿದರು. ಬೆಳಗೊಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಾಯಿನ್‌ತಾಜ್‌, ಆರೋಗ್ಯ ಸುರಕ್ಷಣಾಧಿಕಾರಿ ಜ್ಯೋತಿ, ಆಶಾ ಕಾರ್ಯಕರ್ತೆಯರಾದ ಸಾವಿತ್ರಿ, ಜಯಂತಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.