ADVERTISEMENT

‘ಅಕ್ಕನ ಬುತ್ತಿ’ ಪ್ರಚಾರ ಕಾರ್ಯಕ್ಕೆ ಚಾಲನೆ

ಬೇವಿನಹಳ್ಳಿ ಸಂಜೀವಿನಿ ಒಕ್ಕೂಟದ ವಿನೂತನ ಪ್ರಯತ್ನಕ್ಕೆ ಸಿಇಒ ಕೆ.ಆರ್‌. ನಂದಿನಿ ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 5:39 IST
Last Updated 27 ಡಿಸೆಂಬರ್ 2025, 5:39 IST
ಕೆ.ಆರ್‌.ಪೇಟೆ ತಾಲ್ಲೂಕಿನ ಎಲ್ಲ ಕೊಳವೆಬಾವಿಗಳಿಗೆ ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶ್ರಮಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಎಇಇ ರಶ್ಮಿ ಆರ್. ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಿದರು
ಕೆ.ಆರ್‌.ಪೇಟೆ ತಾಲ್ಲೂಕಿನ ಎಲ್ಲ ಕೊಳವೆಬಾವಿಗಳಿಗೆ ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶ್ರಮಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಎಇಇ ರಶ್ಮಿ ಆರ್. ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಿದರು   

ಮಂಡ್ಯ: ಸರ್ಕಾರಿ ಕಚೇರಿ, ಖಾಸಗಿ ಕಚೇರಿ, ಬ್ಯಾಂಕ್‌ಗಳು ಮತ್ತು ಇನ್ನಿತರೆ ಸಂಸ್ಥೆಗಳಿಗೆ ಸ್ವ-ಸಹಾಯ ಸಂಘದಿಂದ ತಯಾರಿಸಿದ ಶುಚಿ, ರುಚಿಯಾದ, ರಾಸಾಯನಿಕ ಮುಕ್ತವಾದ, ಪೌಷ್ಟಿಕಾಂಶಯುಕ್ತ ಆಹಾರದ ಡಬ್ಬಿಗಳನ್ನು ತಲುಪಿಸಲು ಪ್ರಾರಂಭಿಸಲಾಗುತ್ತಿರುವ ‘ಅಕ್ಕನ ಬುತ್ತಿ’ ಆಹಾರ ತಯಾರಿಕಾ ಕೇಂದ್ರ (ಕ್ಲೌಡ್ ಕಿಚನ್) ಪ್ರಚಾರ ಕಾರ್ಯಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ಚಾಲನೆ ನೀಡಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿಯ ಎಲ್ಲ ಶಾಖಾ ಮುಖ್ಯಸ್ಥರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮಖದಲ್ಲಿ ಆಹಾರ ತಯಾರಿಕಾ ಕೇಂದ್ರದ ಕರಪತ್ರಗಳನ್ನು ಶುಕ್ರವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಬೇವಿನಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ವಿನೂತನ ಪ್ರಯತ್ನವನ್ನು ಶ್ಲಾಘಿಸಿದರು.

ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಸ್ವ-ಸಹಾಯ ಸಂಘದ ಮೂಲಕ ಕಚೇರಿಗಳಿಗೆ ಆಹಾರದ ಡಬ್ಬಿಗಳನ್ನು ತಲುಪಿಸುವ ಕಾರ್ಯಕ್ರಮ ರೂಪಿಸಲಾಗಿದ್ದು, ಒಕ್ಕೂಟದ ಪ್ರಯತ್ನ ಯಶಸ್ವಿಯಾಗಲೆಂದು ಶುಭ ಕೋರಿದರು.

ADVERTISEMENT

ಪ್ರತಿ ದಿನವೂ ವಿಭಿನ್ನ ಮೆನು:

ವಾರದ ಆರು ದಿನವೂ ಮಧ್ಯಾಹ್ನದ ಊಟ ಲಭ್ಯವಿರಲಿದ್ದು, ಪ್ರತಿ ದಿನ ವಿಭಿನ್ನ ರೀತಿಯ ಆಹಾರವನ್ನು ನೀಡಲಾಗುತ್ತದೆ ಎಂದು ಸ್ವ-ಸಹಾಯ ಸಂಘದ ಮಹಿಳೆ ಸುಧಾಮಣಿ ತಿಳಿಸಿದರು. 

‘ಮೊಬೈಲ್ ನಂಬರ್ ಒತ್ತಿ, ಬರಲಿದೆ ನಿಮ್ಮ ಕಚೇರಿಗೆ ಬುತ್ತಿ’ ಎಂಬ ಘೋಷ ವಾಕ್ಯದೊಂದಿಗೆ ‘ಅಕ್ಕನ ಬುತ್ತಿ’ ಆಹಾರ ತಯಾರಿಕಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಉತ್ತಮ ಗುಣಮಟ್ಟದ ಆಹಾರವನ್ನು ಕಚೇರಿಗಳಿಗೆ ಒದಗಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರೆ ಕಚೇರಿಗಳಲ್ಲಿ ನಡೆಯುವ ಸಭೆಗಳಿಗೂ ಸ್ವ-ಸಹಾಯ ಸಂಘಗಳಿಂದ ಮಧ್ಯಾಹ್ನದ ಉಪಾಹಾರ, ಕಾಫಿ, ಟೀ ಸರಬರಾಜು ಪಡೆಯುವ ಬಗ್ಗೆ ಕ್ರಮವಹಿಸಲಾಗುತ್ತಿದೆ. ಎಲ್ಲಾ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಜಿ.ಪಂ. ಸಿಇಒ ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ರೂಪಶ್ರೀ ಕೆ.ಎನ್. ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ, ಉಪಕಾರ್ಯದರ್ಶಿ (ಆಡಳಿತ) ಶಿವಲಿಂಗಯ್ಯ, ಮುಖ್ಯ ಯೋಜನಾಧಿಕಾರಿ ಧನುಷ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾ.ಪಂ. ಇಒಗಳು ಹಾಜರಿದ್ದರು.

‘ಬಹುಗ್ರಾಮ’ ನೀರಿನ ಕಾಮಗಾರಿ ಪೂರ್ಣಗೊಳಿಸಿ: ಸಿಇಒ

ಮಂಡ್ಯ: ಜಿಲ್ಲೆಯಾದ್ಯಂತ ಪ್ರಗತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶುದ್ಧ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ವಹಿಸಿ ಎಂದು ಸಿಇಒ ನಂದಿನಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈಗಾಗಲೇ ಸೂಚಿಸಿರುವಂತೆ ಹೋಬಳಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿಯ ನೀರು ಗಂಟಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಅವುಗಳಿಗೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಮುಂದಿನ ಸಭೆಯಲ್ಲಿ ವರದಿ ಸಲ್ಲಿಸಲು ಸೂಚಿಸಿದರು. ಕಾರ್ಯಾಚರಣೆ ಮತ್ತು ನಿರ್ವಹಣೆಯ ಅವಧಿ ಮುಕ್ತಾಯವಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒಂದು ಬಾರಿಗೆ ದುರಸ್ತಿ ಮಾಡಿ ಗ್ರಾ.ಪಂ.ಗಳಿಗೆ ಹಸ್ತಾಂತರ ಮಾಡುವಂತೆ ಸರ್ಕಾರವು ನಿರ್ದೇಶನ ನೀಡಿದೆ. ಅದರಂತೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಲಾಗಿದೆ. ಸದರಿ ಘಟಕಗಳನ್ನು ಗ್ರಾ.ಪಂ.ಗಳು ಸೂಕ್ತವಾಗಿ ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಗ್ರಾ.ಪಂ.ಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಘಟಕಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಕಾರ್ಯಾಚರಣೆ ಮತ್ತು ನಿರ್ವಹಣೆಯ ಗುತ್ತಿಗೆ ಪಡೆದಿರುವ ಸಂಸ್ಥೆಯ ವತಿಯಿಂದಲೇ ನಿರ್ವಹಿಸಬೇಕೆಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.