ADVERTISEMENT

ಮೇಲುಕೋಟೆಯ ವೈರಮುಡಿ ಉತ್ಸವಕ್ಕೆ ಸಕಲ ಸಿದ್ಧತೆ: ಮಂಡ್ಯ ಡಿ.ಸಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 12:57 IST
Last Updated 27 ಮಾರ್ಚ್ 2023, 12:57 IST
   

ಮಂಡ್ಯ: ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಏ.27ರಿಂದ ಆರಂಭವಾಗಿದ್ದು ಏ.8ರವರೆಗೂ ನಡೆಯಲಿದೆ. ಉತ್ಸವಕ್ಕೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ಎಂದು ಜಿಲ್ಲಾಧಿಕಾರಿ ಡಾ.ಎಚ್ ಎನ್ ಗೋಪಾಲಕೃಷ್ಣ ಸೋಮವಾರ ತಿಳಿಸಿದರು.

‘ಏ.1 ರಂದು ವೈರಮುಡಿ ಕಿರೀಟಧಾರಣೆ ನಡೆಯಲಿದ್ದು ರಾಜ್ಯ, ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಮೇಲುಕೋಟೆಗೆ ಬರುತ್ತಾರೆ. ಭಕ್ತಾಧಿಗಳಿಗೆ ಅಗತ್ಯ ಮೂಲ ವ್ಯವಸ್ಥೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ಅಗತ್ಯತೆಗೆ ತಕ್ಕಂತೆ ವ್ಯವಸ್ಥೆಯಾಗಿದೆಮಾಡಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಬಿಸಿಲು ಹೆಚ್ಚಿರುವುದರಿಂದ ಟ್ಯಾಂಕರ್ ಖಾಲಿಯಾದ ನಂತರ ಮರುಪೂರ್ಣವಾಗುವ ರೀತಿ ನೋಡಿಕೊಳ್ಳಲಾಗುವುದು. ಶೌಚಾಲಯ, ವಾಹನ ನಿಲುಗಡೆ, ವಯಸ್ಸಾದವರು ಹಾಗೂ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವಾಹನದ ಮಾಡಲಾಗಿದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಏ.1ರಂದು ರಾಜಮುಡಿ ಹಾಗೂ ವೈರಮುಡಿಯನ್ನು ಜಿಲ್ಲಾಖಜಾನೆಯಿಂದ ಮೇಲುಕೋಟೆಗೆ ಕೊಂಡೊಯ್ಯಲಾಗುವುದು. ಮೆರವಣಿಗೆಯುದ್ದಕ್ಕೂ ವಿವಿಧ ಗ್ರಾಮಗಳಲ್ಲಿ ಜನರು ಪೂಜೆ ಸಲ್ಲಿಸಲಿದ್ದಾರೆ. ಆಭರಣಗಳ ಪೆಟ್ಟಿಗೆಯನ್ನು ಕೊಂಡೊಯ್ಯಲು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಹೇಳಿದರು.

ADVERTISEMENT

‘ಜಿಲ್ಲಾ ಖಜಾನೆಯಿಂದ, ಲಕ್ಷ್ಮಿ ಜನಾರ್ಧನ ಸ್ವಾಮಿ ದೇವಸ್ಥಾನ, ಇಂಡುವಾಳು, ತೂಬಿನಕೆರೆ, ಗಣಂಗೂರು, ಶೆಟ್ಟಿಹಳ್ಳಿ, ಕಿರಂಗೂರು ಬನ್ನಿಮಂಟಪ, ಕೂಡಲಕುಪ್ಪೆ ಗೇಟ್, ದರಸಗುಕುಪ್ಪೆ, ಪಾಂಡವಪುರ ರೈಲ್ವೆ ನಿಲ್ದಾಣ, ಕೆನ್ನಾಳು, ಪಾಂಡವಪುರ, ಹಿರೇಮರಳಿ ಗೇಟ್, ಬಣಘಟ್ಟ, ಟಿ.ಎಸ್.ಛತ್ರ,, ಮಹದೇಶ್ವರ ಪುರ, ಬೆಳ್ಳಾಳೆ, ಜಕ್ಕನಹಳ್ಳಿ, ತಗಲಕೆರೆ ಮೂಲಕ ಮೆರವಣಿಗೆಯು ಮೇಲುಕೋಟೆ ತಲುಪಲಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್ ಹುಲ್ಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್‌.ಎಲ್ ನಾಗರಾಜು, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್‌.ನಿರ್ಮಲಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.