
ಶ್ರೀರಂಗಪಟ್ಟಣ: ‘ಅನ್ನಭಾಗ್ಯ ಯೋಜನೆಯಡಿ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಸರ್ಕಾರ ಅನ್ನ ಸುವಿಧ ಯೋಜನೆ ರೂಪಿಸಿದ್ದು, ಅವರ ಮನೆ ಬಾಗಿಲಿಗೆ ಪಡಿತರ ತಲುಪಿಸಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ಎಂ.ಎಲ್. ದಿನೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಹಿರಿಯ ನಾಗರಿಕರು ತಿಂಗಳ ಒಂದನೇ ತಾರೀಕಿನಿಂದ 5ನೇ ತಾರೀಕಿನ ಒಳಗೆ ಅನ್ನ ಸುವಿಧ ಯೋಜನೆಗೆ ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕು. ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಇಚ್ಛಿಸುವವರು ಬಿಪಿಎಲ್ ಪಡಿತರ ಚೀಟಿ ಮಾಡಿಸಲು ಅವಕಾವಿದ್ದು, ಗ್ರಾಮ ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬೇಕು’ ಎಂದು ಹೇಳಿದರು.
‘ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಈ ವರ್ಷದ ಆಗಸ್ಟ್ ವರೆಗೆ ಹಣ ಪಾವತಿಯಾಗಿದೆ. ಸೆಪ್ಟೆಂಬರ್ ತಿಂಗಳ ಹಣ ಇನ್ನೊಂದು ವಾರದಲ್ಲಿ ಬಿಡುಗಡೆಯಾಗಲಿದೆ. ಶಕ್ತಿ ಯೋಜನೆಯಡಿ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರು ಮತ್ತು ವೃದ್ಧರ ಅನುಕೂಲಕ್ಕಾಗಿ ಪಟ್ಟಣದ ಕಸಬಾ ಸೊಸೈಟಿ ಎದುರು ಕಾಂಪೌಂಡ್ ತೆಗೆಸಿ ದ್ವಾರ ಮಾಡಿಸಲಾಗುವುದು’ ಎಂದರು.
ತಾಲ್ಲೂಕು ಯೋಜನಾಧಿಕಾರಿ ಎಂ. ಎಂ. ತ್ರಿವೇಣಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.