ADVERTISEMENT

ಬಿಜೆಪಿ ಜೆಡಿಎಸ್ ಹುನ್ನಾರ ನಡೆಯದು: ಪಿ.ಎಂ.ನರೇಂದ್ರಸ್ವಾಮಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2024, 16:50 IST
Last Updated 4 ಆಗಸ್ಟ್ 2024, 16:50 IST
ಜನಾಂದೋಲನ ಸಭೆಯ ಪೂರ್ವಭಾವಿಯಾಗಿ ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿದರು.
ಜನಾಂದೋಲನ ಸಭೆಯ ಪೂರ್ವಭಾವಿಯಾಗಿ ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿದರು.   

ಮಳವಳ್ಳಿ: ಪಾದಯಾತ್ರೆ ಹಾಗೂ ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಸುತ್ತಿರುವ ಬಿಜೆಪಿ– ಜೆಡಿಎಸ್ ಹುನ್ನಾರ ಫಲಿಸುವುದಿಲ್ಲ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜನಾಂದೋಲನ ಕಾರ್ಯಕ್ರಮದ ಪೂರ್ವಭಾವಿಯಾಗಿ ಭಾನುವಾರ ಸಭೆಯ ನಡೆಸಿ ಅವರು ಮಾತನಾಡಿದರು.

‘ರಾಜ್ಯದ ಮತದಾರರು ಕಾಂಗ್ರೆಸ್‌ಗೆ ಸ್ವಷ್ಟ ಬಹುಮತ ಕೊಟ್ಟು ಅಧಿಕಾರ ನೀಡಿದ್ದಾರೆ. ಇಂಥಹ ಜನಪರ ಸರ್ಕಾರವನ್ನು ಅಸ್ಥಿರಗೊಳಿಸಲು ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ– ಜೆಡಿಎಸ್ ಪಕ್ಷಗಳಿಗೆ ಕಾಂಗ್ರೆಸ್ ತಕ್ಕ ಉತ್ತರ ನೀಡಲಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನೀಡುವ ಅನುದಾನ ಕಡಿತಗೊಳಿಸಿರುವುದನ್ನು ವಿರೋಧಿಸಿ ಹಾಗೂ ಬಿಜೆಪಿ ಸರ್ಕಾರದ 21 ಹಗರಣಗಳ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಆ.6ರಂದು ಮಂಡ್ಯದಲ್ಲಿ ಹಮ್ಮಿಕೊಂಡಿರುವ ಜನಾಂದೋಲನ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಬೇಕು’ ಎಂದು ಕರೆ ನೀಡಿದರು.

ADVERTISEMENT

‘ಬಹುಮತದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಿದರೆ ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್‌ ಬಲವನ್ನು ಕುಗ್ಗಿಸಬಹುದು ಎಂಬ ಹುನ್ನಾರ ನಡೆಯುತ್ತಿದೆ. ಅವರ ಆರೋಪಗಳಿಗೆ ಸದನದಲ್ಲಿ ತಕ್ಕ ಉತ್ತರ ನೀಡಲಾಗಿದೆ. ಆದರೂ ರಾಜ್ಯಪಾಲರ ಮುಖಾಂತರ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೊಡಿಸಿದ್ದಾರೆ. ಬಿಜೆಪಿಯವರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಂದೆ ಬಿಟ್ಟುಕೊಂಡು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಯಾವುದೇ ಆರೋಪಗಳಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯರ ಅವರ ವಿರುದ್ಧ ಸಂಬಂಧಪಡದ ವಿಷಯಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರವು ರಾಜ್ಯಪಾಲರ ಮೂಲಕ ತೊಂದರೆ ಕೊಡಿಸುತ್ತಿದೆ. ಪ್ರಶ್ನೆ ಮಾಡುವ ಹಕ್ಕು ನಮ್ಮಲ್ಲಿರುವುದರಿಂದ ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಿಕ್ಕಲಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಸಿ.ಪಿ.ರಾಜು, ಕೆಪಿಸಿಸಿ ಸದಸ್ಯರಾದ ಸಿದ್ದೇಗೌಡ, ಪುಟ್ಟಸ್ವಾಮಿ, ಕಾಂಗ್ರೆಸ್ ತಾಲ್ಲೂಕು ಯುವ ಘಟಕದ ಅಧ್ಯಕ್ಷರಾದ ಹುಸ್ಕೂರು ಎಚ್.ಕೆ.ಕೃಷ್ಣಮೂರ್ತಿ, ಶಿವಮೂರ್ತಿ, ಮುಖಂಡರಾದ ಆರ್.ಎನ್. ವಿಶ್ವಾಸ್, ಕೆ.ಜೆ. ದೇವರಾಜು, ಸಿ.ಮಾಧು, ಚಂದ್ರಕುಮಾರ್, ಕುಳ್ಳಚನ್ನಂಕಯ್ಯ, ಮುಟ್ಟನಹಳ್ಳಿ ಅಂಬರೀಶ್, ಕೆ.ಎಸ್. ಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.