ಮಂಡ್ಯ: ‘ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಮುಖಂಡರು ಬಿಟ್ ಕಾಯಿನ್ ಪ್ರಕರಣದಲ್ಲಿ ಸುಳ್ಳು ಮಾಹಿತಿ ಪ್ರಚಾರ ಮಾಡುತ್ತಿದ್ದಾರೆ. ಆ ಮೂಲಕ ಜನರ ದಿಕ್ಕು ತಪ್ಪಿಸುವು ಕೆಲಸ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜೆ.ವಿಜಯಕುಮಾರ್ ಆರೋಪಿಸಿದ್ದಾರೆ.
‘ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ತೀವ್ರಗತಿಯ ವಿಚಾರಣೆ ನಡೆಯುತ್ತಿದೆ. ವಿಚಾರಣಾ ಹಂತದಲ್ಲಿರುವಾಗ ಕಾಂಗ್ರೆಸ್ಸಿಗರು ಬಹಿರಂಗ ಆರೋಪ ಮಾಡುತ್ತಿರುವುದು ಸರಿಯಲ್ಲ. ಯಾವುದೇ ಸಾಕ್ಷಿ, ಆಧಾರವಿಲ್ಲದೇ ಇಡೀ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಪ್ರಕರಣದ ಆರೋಪಿಯಾಗಿರುವ ಶ್ರೀಕೃಷ್ಣನ ಬಂಧಿಸಿ ವಿಚಾರಣೆ ನಡೆಸಲಾಗಿದೆ. ಆದರೂ ಕಾಂಗ್ರೆಸ್ ಮುಖಂಡರು ರಾಜಕೀಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಆರೋಪಿಯ ವ್ಯಾಲೆಟ್ ತೆರೆದು ನೋಡಿದಾಗ ಬಿಟ್ ಕಾಯಿನ್ ಪತ್ತೆಯಾಗಿವೆ. ಸೈಬರ್ ತಜ್ಞರ ಪ್ರಕಾರ ಇವು ಆರೋಪಿಯ ವೈಯಕ್ತಿಕ ಕತೆಯಲ್ಲ, ಬದಲಿಗೆ ಇದೊಂದು ಬಿಟ್ ಕಾಯಿನ್ ವಿನಿಮಯ ಕೇಂದ್ರ ವ್ಯಾಲೇಟ್ ಆಗಿತ್ತು. ಈ ಅಂಶಗಳು ಹಾಗೂ ದಾಖಲೆಗಳನ್ನು ನಾಯಾಲಯಕ್ಕೆ ಸಲ್ಲಿಸಲಾಗಿದೆ. ಪೊಲೀಸರು ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ’ ಎಂದರು.
‘ನಿಷ್ಪಕ್ಷಪಾತ, ನ್ಯಾಯಯುತ ತನಿಖೆಗೆ ಧಕ್ಕೆಯಾಗದಂತೆ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೆಲ್ಲ ತಿಳಿದಿದ್ದರೂ ವಿಪಕ್ಷಗಳು ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಡಿಐಜಿ ದರ್ಜೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯುತ್ತಿದೆ. ಇದರಲ್ಲಿ ಈ ಹಿಂದೆ ಗೃಹ ಮಂತ್ರಿಯಾಗಿದ್ದ ಹಾಲಿ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರ ಹಸ್ತಕ್ಷೇಪವೇನಿಲ್ಲ. ಆದರೆ ವಿರೋಧ ಪಕ್ಷಗಳ ಆರೋಪ ನಿರಾಧಾರ’ ಎಂದಿದ್ದಾರೆ.
‘ಇದೇ ಮಾಹಿತಿಯನ್ನು ಈಗಾಗಲೇ ಸಿಬಿಐ, ಇ.ಡಿಗೆ ದಾಖಲೆಗಳೊಂದಿಗೆ ಸಲ್ಲಿಸಲಾಗಿದೆ. ಅಧಿಕಾರಿಗಳು ನಿರಂತರವಾಗಿ ಸಂಪರ್ಕದಲ್ಲಿದ್ದು, ತನಿಖೆಯ ಮೇಲೆ ನಿಗಾ ವಹಿಸಿದ್ದಾರೆ. ಇಷ್ಟಾದರೂ ವಿಪಕ್ಷಗಳು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಾ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.