ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಹಿತರಕ್ಷಣಾ ಸಮಿತಿ ನಗರದಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರ ಹೋರಾಟಗಾರರು ಕರಾಳ ದಿನ ಆಚರಿಸಿದರು.
ನಗರದ ಜೆ.ಸಿ.ವೃತ್ತದಿಂದ ಸರ್ ಎಂ.ವಿ ಪ್ರತಿಮೆವರೆಗೆ ಕಪ್ಪು ಬಾವುಟ ಹಿಡಿದು ಮೆರವಣಿಗೆ ನಡೆಸಿದರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ತೀವ್ರ ಬರ ಪರಿಸ್ಥಿತಿ ಕಾಡುತ್ತಿದೆ, ರೈತರು ಬೆಳೆ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ತಮಿಳುನಾಡಿಗೆ ನೀರು ಬಿಟ್ಟು ದಸರಾ ಆಚರಿಸುತ್ತಿದ್ದಾರೆ. ರೈತರ ಪಾಲಿಗೆ ವಿಜಯದಶಮಿಯ ಈ ದಿನ ಕರಾಳ ದಿನವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ಹೋರಾಟ 50 ದಿನ ಪೂರೈಸಿದ್ದರೂ ಸರ್ಕಾರ ಹೋರಾಟಗಾರರನ್ನು ಕರೆದು ಮಾತನಾಡಿಲ್ಲ. ಅಧಿಕಾರಿಗಳು ಕೂಡ ಹೋರಾಟಗಾರರನ್ನು ಭೇಟಿಯಾಗಿಲ್ಲ. ರೈತರನ್ನು ನಿರ್ಲಕ್ಷ್ಯ ಮಾಡಿರುವ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.