ADVERTISEMENT

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಜಿಪಂ ಸಿಇಒ ತರಾಟೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 6:52 IST
Last Updated 16 ಡಿಸೆಂಬರ್ 2025, 6:52 IST
ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಗ್ರಾಮದ ಸರ್ಕಾರಿ ಶಾಲೆಗೆ ಸೋಮವಾರ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್‌.ನಂದಿನಿ ಅವರು ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದರು 
ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಗ್ರಾಮದ ಸರ್ಕಾರಿ ಶಾಲೆಗೆ ಸೋಮವಾರ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್‌.ನಂದಿನಿ ಅವರು ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದರು    

ಮಂಡ್ಯ: ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ ಶಾಲೆಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸೋಮವಾರವೂ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿದರು.

‘ವಿಜ್ಞಾನ ವಿಷಯವನ್ನು ಸರಿಯಾಗಿ ಬೋಧನೆ ಮಾಡುತ್ತಿಲ್ಲ’ ಎಂದು ವಿದ್ಯಾರ್ಥಿಗಳು ಸಿಇಒ ಅವರಿಗೆ ತಿಳಿಸಿದ್ದು, ಈ ಬಗ್ಗೆ ಶಿಕ್ಷಕರಿಗೆ ಎಚ್ಚರಿಕೆ ನೀಡಿದರು ಹಾಗೂ ಬಿಇಒ ಅವರು ಪರಿಶೀಲಿಸಿ ಒಂದು ವಾರದೊಳಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು. 15 ದಿನಗಳ ನಂತರ ಮತ್ತೆ ಶಾಲೆಗೆ ಭೇಟಿ ನೀಡಿ ವಿಜ್ಞಾನ ವಿಷಯದ ಬೋಧನೆಯಲ್ಲಿ ಆಗಿರುವ ಪ್ರಗತಿ ಕುರಿತು ವರದಿ ಸಲ್ಲಿಸಲು ಬಿಇಒ ಅವರಿಗೆ ಸೂಚಿಸಿದರು.

ಶಾಲೆಯ ಎಲ್ಲಾ ಶಿಕ್ಷಕರ ಸಭೆ ನಡೆಸಿ, ಇರುವ 19 ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಬೋಧನೆ ಮಾಡಲು ಆಗುವುದಿಲ್ಲ ಎಂದರೆ ಶಿಕ್ಷಕರಾಗಿ ನಿಮ್ಮ ಜವಾಬ್ದಾರಿ ಏನು? ವರ್ಗಾವಣೆಯಾದ ಮಾತ್ರಕ್ಕೆ ಮಕ್ಕಳಿಗೆ ಪಾಠ ಮಾಡಬಾರದು ಎಂದು ಯಾರು ಹೇಳಿದ್ದಾರೆ? ಕಳೆದ 15 ದಿನಗಳಿಂದ ಪಾಠ ಮಾಡದೇ ಏನು ಮಾಡುತ್ತಿದ್ದೀರಿ? ಎಂದು ವಿಜ್ಞಾನ ವಿಷಯ ಬೋಧನೆ ಮಾಡುವ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

ADVERTISEMENT

ಎಲ್ಲ ವಿಷಯಗಳಿಗೂ ವಿಶೇಷ ತರಗತಿಗಳನ್ನು ಮಾಡಬೇಕು, ಪ್ರತಿ ವಿದ್ಯಾರ್ಥಿಗೂ ವಿಶೇಷ ಗಮನ ಹರಿಸಬೇಕು, ಎಲ್ಲ ವಿದ್ಯಾರ್ಥಿಗಳಲ್ಲಿಯೂ ಆತ್ಮವಿಶ್ವಾಸ ತುಂಬಿ ಶೇ 100ರಷ್ಟು ಫಲಿತಾಂಶ ಬರಲು ಎಲ್ಲ ಶಿಕ್ಷಕರು ಧನಾತ್ಮಕವಾಗಿ ಕೆಲಸ ಮಾಡಬೇಕು, 15 ದಿನಗಳಲ್ಲಿ ಯಾವುದೇ ಪ್ರಗತಿ ಕಾಣದಿದ್ದಲ್ಲಿ ನಿಮ್ಮ ವಿರುದ್ಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸೋರುವ ಗ್ರಂಥಾಲಯ

ಶಾಲೆಯಲ್ಲಿನ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಇಒ ಅವರು ಕಟ್ಟಡ ದುರಸ್ತಿಯಲ್ಲಿದ್ದು, ಮಳೆಗಾಲದಲ್ಲಿ ಸೋರಿಕೆಯಾಗುತ್ತದೆ, ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲ ಆದ್ದರಿಂದ, ಬೇರೆ ಕೊಠಡಿಯನ್ನು ಗ್ರಂಥಾಲಯಕ್ಕೆ ಒದಗಿಸುವಂತೆ ಶಿಕ್ಷಕರಿಗೆ ಸೂಚಿಸಿದರು.

ಅಕ್ಕಿ, ಬೇಳೆ, ಹಾಲಿನ ಪೌಡರ್, ಮೊಟ್ಟೆ, ಎಣ್ಣೆ ಸೇರಿದಂತೆ ಇತರೆ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರಿಶೀಲಿಸಿದ ಅವರು ವಿದ್ಯಾರ್ಥಿಗಳಿಗೆ ಶುಚಿ ಮತ್ತು ರುಚಿಯಾದ ಆಹಾರವನ್ನು ಸರಬರಾಜು ಮಾಡುವಂತೆ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಿಸಿ ಊಟ ಯೋಜನೆಯ ಶಿಕ್ಷಣಾಧಿಕಾರಿ ರವಿಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಬಿಂಡಿಗನವಿಲೆ ಶಾಲೆಯ ಶಿಕ್ಷಕರು ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.