ಶ್ರೀರಂಗಪಟ್ಟಣ: ‘ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಸಾರ್ವಜನಿಕರಿಂದ ದೂರುಗಳ ಬಾರದಂತೆ ನೋಡಿಕೊಳ್ಳಬೇಕು’ ಎಂದು ನೂತನ ತಹಶೀಲ್ದಾರ್ ಚೇತನಾ ಯಾದವ್ ತಾಕೀತು ಮಾಡಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಕಂದಾಯ ಇಲಾಖೆ ನೌಕರರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ‘ಜನರಿಂದ ಬರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ವಿನಾಕಾರಣ ಅಲೆದಾಡಿಸಬಾರದು. ಸಾರ್ವಜನಿಕ ಸಮಸ್ಯೆಗಳನ್ನು ಆರಂಭದಲ್ಲೇ ಪರಿಹರಿಸಬೇಕು. ಸೂಕ್ಷ್ಮ ಪ್ರಕರಣಗಳಿದ್ದರೆ ತಕ್ಷಣ ನನ್ನ ಗಮನಕ್ಕೆ ತರಬೇಕು’ ಎಂದು ಹೇಳಿದರು.
‘ಕಂದಾಯ ಇಲಾಖೆ ಉಳಿದೆಲ್ಲ ಇಲಾಖೆಗಳಿಗೆ ಮಾತೃ ಸಂಸ್ಥೆಯಾಗಿದೆ. ತಾಲ್ಲೂಕು ಕಚೇರಿ, ನಾಡ ಕಚೇರಿ, ಕಂದಾಯ ನಿರೀಕ್ಷಕರ ಕಚೇರಿ ಮತ್ತು ಗ್ರಾಮಾಡಳಿತ ಅಧಿಕಾರಿಗಳ ಕಚೇರಿಗಳಿಗೆ ಹೆಚ್ಚು ಜನರು ಬರುವುದು ಸಹಜ. ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇತರ ಇಲಾಖೆಗಳ ಜತೆ ಸಂವಹನ ಸಾಧಿಸಿ ಕೆಲಸ ಮಾಡಬೇಕು’ ಎಂದು ಅವರು ತಿಳಿಸಿದರು.
ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಟಿ.ಪಿ. ರೇವಣ್ಣ, ಗ್ರಾಮ ಸಹಾಯಕರ ಸಂಘ, ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಹಾಗೂ ಇನ್ನಿತರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.