ಮದ್ದೂರು: ತಾಲ್ಲೂಕಿನ ಸೋಮನಹಳ್ಳಿಯ ಗಣೇಶ ದೇವಸ್ಥಾನದಲ್ಲಿ ಮಂಗಳವಾರ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆದ ಅಧಿಕಾರಿಗಳು, ಬಾಲಕಿಯನ್ನು ರಕ್ಷಿಸಿದ್ದಾರೆ.
ತಾಲ್ಲೂಕಿನ ಅಗರಲಿಂಗನದೊಡ್ಡಿಯ 27 ವರ್ಷದ ಯುವಕರೊಬ್ಬರಿಗೆ ರಾಮನಗರ ಜಿಲ್ಲೆಯ ಮಾರ್ಚೋನಹಳ್ಳಿ ಗ್ರಾಮದ 15 ವರ್ಷದ ಬಾಲಕಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ವಧು–ವರರ ಕಡೆಯವರು ಮದ್ದೂರು ಬಳಿಯ ಸೋಮನಹಳ್ಳಿಯಲ್ಲಿರುವ ಗಣೇಶ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ 7.30ಕ್ಕೆ ಮದುವೆ ಮಾಡಲು ಏರ್ಪಾಡು ಮಾಡಿಕೊಂಡಿದ್ದರು. ಈ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರು ಬಂದಿತ್ತು.
ಮದ್ದೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಚೇತನ್ ಕುಮಾರ್, ಬಾಲ್ಯ ವಿವಾಹ ನಿಷೇಧ ಅಧಿಕಾರಿ ಶೋಭಾ, ಮಕ್ಕಳ ಸಹಾಯವಾಣಿ ಸಂಯೋಜಕಿ ಇಂಪನಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರದೀಪ್ ಹಾಗೂ ಸಬ್ ಇನ್ಸ್ಪೆಕ್ಟರ್ ಮಂಜೇಗೌಡ ಅವರು ಅಗರಲಿಂಗನದೊಡ್ಡಿಯ ವರನ ನಿವಾಸಕ್ಕೆ ತೆರಳಿ ಬಾಲಕಿಯನ್ನು ವಶಕ್ಕೆ ಪಡೆದಿದ್ದಾರೆ. ಬಾಲಕಿಯನ್ನು ಮಂಡ್ಯದ ಬಾಲಮಂದಿರದಲ್ಲಿ ಇರಿಸಲಾಗಿದೆ.
ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ನೀಡಿದದೂರಿನನ್ವಯ ಮದ್ದೂರು ಪೊಲೀಸ್ ಠಾಣೆಯಲ್ಲಿ ವರ ಹಾಗೂ ಸಂಬಂಧಿಕರ ವಿರುದ್ಧ ದೂರು ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.