
ಕೆ.ಆರ್.ಪೇಟೆ: ಬಾಲ್ಯ ವಿವಾಹ ಪದ್ಧತಿಯು ನಾಗರಿಕ ಸಮಾಜಕ್ಕೆ ಅಂಟಿರುವ ಶಾಪವಾಗಿದೆ ಎಂದು ಪಟ್ಟಣದ ಜೆಎಂಎಫ್ಸಿ ಸಿವಿಲ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಸುಧೀರ್ ಹೇಳಿದರು.
ಪಟ್ಟಣದ ಕೆಪಿಎಸ್ ಶಾಲೆಯಲ್ಲಿ ಮದ್ದೂರಿನ ಧ್ವನಿ ಲಯನ್ ಸಂಸ್ಥೆ ಹಾಗೂ ತಾಲ್ಲೂ ಕಾನೂನು ಸೇವಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಹಾಗೂ ಆಹಾರ ಸಂರಕ್ಷಣೆ ಕುರಿತು ಶನಿವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳಿಗೆ 18 ವರ್ಷ ಹಾಗೂ ಗಂಡು ಮಕ್ಕಳಿಗೆ 21 ವರ್ಷ ತುಂಬುವ ಮುನ್ನವೇ ವಿವಾಹ ಮಾಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ. ಹೆಣ್ಣು ಮಕ್ಕಳನ್ನು 18 ವರ್ಷ ತುಂಬುವ ಮುನ್ನವೇ ಮದುವೆ ಮಾಡುವುದರಿಂದ ಹೆಣ್ಣು ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಗುತ್ತದೆಯಲ್ಲದೆ ದೈಹಿಕ ಸಾಮರ್ಥ್ಯದಲ್ಲಿ ವ್ಯತ್ಯಯವಾಗಿ, ಸಮಸ್ಯೆಗಳ ಸುಳಿಗೆ ಸಿಲುಕಿ ನರಳ ಬೇಕಾಗುತ್ತದೆ. ಆದ್ದರಿಂದ ಹೆಣ್ಣು ಮಕ್ಕಳು 18 ವರ್ಷ ತುಂಬುವ ಮುನ್ನ ವಿವಾಹ ಬಂಧನಕ್ಕೆ ಸಿಲುಕಿ ನರಳದೆ, ಶಿಕ್ಷಣದ ಶಕ್ತಿಯನ್ನು ಪಡೆಯಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಧ್ವನಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ, ಮೂಳೆತಜ್ಞ ವೈದ್ಯ ಡಾ.ಎಂ.ಬಿ. ಲೋಹಿತ್ ಮಾತನಾಡಿ, ತಿನ್ನುವ ಆಹಾರವನ್ನು ಮತ್ತು ಯಾವುದೇ ತರಹದ ಸೇವಿಸುವ ವಸ್ತುಗಳನ್ನು ವ್ಯರ್ಥ ಮಾಡದೇ ನಿಯಮಿತವಾಗಿ ಬಳಸುವoತೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡುಬಂದರೆ ವಿದ್ಯಾರ್ಥಿಗಳು ಹಾಗೂ ಯುವಜನರು ಮಕ್ಕಳ ಹಕ್ಕುಗಳ ಸಂರಕ್ಷಣಾ ಘಟಕ ಅಥವಾ ಸಮೀಪದ ಪೊಲೀಸ್ ಠಾಣೆ ಇಲ್ಲವೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ 112 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವ ಮೂಲಕ ಬಾಲ್ಯ ವಿವಾಹವನ್ನು ಕಡ್ಡಾಯವಾಗಿ ತಡೆಯಲು ಸಂಕಲ್ಪ ಮಾಡಬೇಕೆಂದು ಸಲಹೆ ನೀಡಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ದೇವರಾಜು, ಧ್ವನಿ ಲಯನ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷೆ ರಜನಿ ರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ, ಆರಕ್ಷಕ ನಿರೀಕ್ಷಕರಾದ ಆನಂದೇಗೌಡ, ಬಿ.ಸುಮಾರಾಣಿ ಮಾತನಾಡಿದರು.
ಲಯನ್ ಸಂಸ್ಥೆಯ ಜಿಲ್ಲಾ ಗವರ್ನರ್ ಸಿದ್ದರಾಜು, ಸದಸ್ಯರಾದ ಪ್ರತಿಮಾ, ದಿನೇಶ್ ಕುಮಾರ್, ಕೆಪಿಎಸ್ ಶಾಲೆಯ ಪ್ರಾಂಶುಪಾಲ ಡಿ.ಟಿ. ಪುಲಿಗೆರೆಯ್ಯ, ಉಪ ಪ್ರಾಂಶುಪಾಲ ರಾಘವೇಂದ್ರ, ಪಿಎಲ್ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಕೆ.ಎಸ್.ಬಸವೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.