ಮಂಡ್ಯ: ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿರುವ ಮಂಡ್ಯ ಜಿಲ್ಲೆಯಲ್ಲಿ ಬಾಲ್ಯ ವಿವಾಹ ವರದಿ ಆಗುತ್ತಿರುವುದನ್ನು ನೋಡಿದರೆ ಬೇಸರ ಆಗುತ್ತದೆ ಎಂದು ಜಿಲ್ಲಾಧಿಕಾರಿ ಕುಮಾರ ವಿಷಾದಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಲುವಾಗಿ ಜುಲೈ 19 ರಂದು ಜಾಗೃತಿ ಜಾಥಾ ಹಮ್ಮಿಕೊಳ್ಳುವ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
‘ಬಾಲ್ಯ ವಿವಾಹ ನಡೆಯುತ್ತಿರುವುದರ ಬಗ್ಗೆ ಚಿಂತಿಸಬೇಕಿದೆ. ಬಾಲ್ಯ ವಿವಾಹದ ದುಷ್ಪರಿಣಾಮ ಕುರಿತು ಹಲವು ಅರಿವು ಕಾರ್ಯಕ್ರಮಗಳನ್ನು ತಳಮಟ್ಟದಿಂದಲೂ ಆಯೋಜಿಸಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಮನ್ವಯದುಂದ ಕಾರ್ಯನಿರ್ವಹಿಸಿ ಶಾಲೆಯಲ್ಲಿ ಗೈರು ಹಾಜರಾಗುವ ಹೆಣ್ಣು ಮಕ್ಕಳ ಬಗ್ಗೆ ನಿಗಾ ವಹಿಸಿದರೆ ಬಾಲ್ಯ ವಿವಾಹ ತಡೆಗಟ್ಟಬಹುದು’ ಎಂದು ತಿಳಿಸಿದರು.
‘ಬಾಲ್ಯ ವಿವಾಹ ನಡೆದ ನಂತರ ದೂರು ದಾಖಲಿಸುವ ಕ್ರಮ ಕೈಗೊಳ್ಳುವ ಬದಲು ಬಾಲ್ಯ ವಿವಾಹ ನಡೆಯದಂತೆ ನೋಡಿಕೊಳ್ಳಿ. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಿದರೆ ಬಾಲ್ಯ ವಿವಾಹ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಜುಲೈ 19 ರಂದು ಬೆಳಿಗ್ಗೆ 8 ಗಂಟೆಗೆ ಜಾಥಾ ಕಾರ್ಯಕ್ರಮ ನಡೆಯಲಿದ್ದು, ಕಾಲೇಜು ವಿದ್ಯಾರ್ಥಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯೋಜನೆ ರೂಪಿಸಿ’ ಎಂದು ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಮಾತನಾಡಿ, ‘ಬಾಲ್ಯ ವಿವಾಹವನ್ನು ಪ್ರೋತ್ಸಾಹಿಸುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಇರುತ್ತದೆ. ಕಾನೂನಿನಲ್ಲಿರುವ ಶಿಕ್ಷೆಗಳ ಬಗ್ಗೆ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡುವ ಕಾರ್ಯಾಗಾರ ಆಯೋಜಿಸಿ ಪ್ರಚಾರ ಮಾಡಬೇಕು’ ಎಂದು ತಿಳಿಸಿದರು.
ಸಭೆಯಲ್ಲಿ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಲುವಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.