ನಾಗಮಂಗಲ: ಸಾಮಾನ್ಯ ಜನರಿಗೆ ವಿಜ್ಞಾನವನ್ನು ತಲುಪಿಸಿದಾಗ ಮಾತ್ರ ಪ್ರಸ್ತುತ ದಿನದಲ್ಲಿ ಸ್ವಚ್ಛ ಪರಿಸರ, ತಂತ್ರಜ್ಞಾನ, ಆರೋಗ್ಯವಂತ ದೇಶ ನಿರ್ಮಾಣ ಮಾಡಲು ಸಾಧ್ಯ ಎಂದು ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಎಸ್.ವಿ.ಸಂಕನೂರ ಹೇಳಿದರು.
ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ 27ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಮಾತನಾಡಿದರು.
ವಿಜ್ಞಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದಾಗ ಮಾತ್ರ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲು ಸಾಧ್ಯ. ಜ್ಞಾನ ವಿಜ್ಞಾನ ಮೇಳಗಳನ್ನು ಹೆಚ್ಚಾಗಿ ಆಯೋಜಿಸುವುದರಿಂದ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಹೆಚ್ಚಿಸಬಹುದು. ವಿದ್ಯಾರ್ಥಿಗಳಿಗೆ ಸಂಶೋಧನೆ, ಆವಿಷ್ಕಾರ, ವೈಜ್ಞಾನಿಕ ಚಿಂತನೆ ಬೆಳೆಸಲು ಇಂತಹ ಕಾರ್ಯಕ್ರಮಗಳು ಪೂರಕವಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಪಿಯುಸಿ ಮುಗಿದ ನಂತರ ಶೇ 30ರಷ್ಟು ವಿದ್ಯಾರ್ಥಿಗಳು ಮಾತ್ರ ವಿಜ್ಞಾನ ವಿಷಯದಲ್ಲಿ ಮುಂದುವರೆಯುತ್ತಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಾಗಬೇಕು. ದೇಶದ ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡುವ ವಿಜ್ಞಾನಿಗಳನ್ನು ತಯಾರು ಮಾಡಬೇಕು. ವಿಜ್ಞಾನ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಬೇಕು.
ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಕಳೆದ ಐದು ಶತಮಾನದಲ್ಲಿ ವಿಜ್ಞಾನ ಯುಗ ಬಹಳಷ್ಟು ಅಭಿವೃದ್ಧಿ ಸಾಧಿಸಿದೆ. ವಿಜ್ಞಾನದ ಯುಗಕ್ಕೆ ಕೊನೆಯೇ ಇಲ್ಲವಾಗಿದೆ. ಜ್ಞಾನ ಮತ್ತು ಆಧ್ಯಾತ್ಮಿಕ ಸಮ್ಮಿಲನದೊಂದಿಗೆ ವಿಜ್ಞಾನ ಬೆಳೆಯಬೇಕು. ಆಗ ಪ್ರಪಂಚವು ಬೆಳಗುತ್ತದೆ. ಮಕ್ಕಳಿಗೆ ವಿಜ್ಞಾನದ ಬಗ್ಗೆ ಕುತೂಹಲ ಮೂಡಿಸುವ ನಿಟ್ಟಿನಲ್ಲಿ ಪೋಷಕರು ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಳವಳ್ಳಿಯ ಯುವ ವಿಜ್ಞಾನಿ ಎಂ.ಎನ್. ಪ್ರತಾಪ್ ಮತ್ತು ದಾವಣಗೆರೆ ಆರ್.ವಿ.ಕೆ. ಶಾಲೆಯ ಬಾಲ ವಿಜ್ಞಾನಿ ಕೆ.ಎಂ.ಪ್ರಥಮ್ ಅವರನ್ನು ಸನ್ಮಾನಿಸಲಾಯಿತು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶಾಸಕ ಸುರೇಶ್ ಗೌಡ, ಎಂ. ಶ್ರೀನಿವಾಸ್, ಇಸ್ರೋ ವಿಜ್ಞಾನಿ ಸಿ.ಡಿ.ಪ್ರತಾಪ್, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಪಂ ಸಿಇಒ ಕೆ.ಯಾಲಕ್ಕಿಗೌಡ, ಡಿಡಿಪಿಐ ರಘುನಂದನ್, ಹುಲಿಕಲ್ ನಟರಾಜ್, ಗಿರೀಶ್ ಕಡ್ಲೆವಾಡ, ಬಿ.ಎನ್.ಶ್ರೀನಾಥ್, ನರೇಂದ್ರ ಆಡನೂರು, ಬಸವರಾಜು ಮತ್ತು ಕೌಶಿಕ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.