
ಶ್ರೀರಂಗಪಟ್ಟಣ: ‘ಕ್ಷೇತ್ರದ ಪ್ರತಿ ಮನೆಗಳಿಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ಸಬರಾಜು ಮಾಡುವ ಸಂಕಲ್ಪ ಮಾಡಿದ್ದು ಹಂತ ಹಂತವಾಗಿ ನೀರು ಸರಬರಾಜು ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.
ತಾಲ್ಲೂಕಿನ ಮೊಗರಹಳ್ಳಿ ಗ್ರಾಮದಲ್ಲಿ, 28 ಗ್ರಾಮಗಳಿಗೆ ಕಾವೇರಿ ಬಲದಂಡೆ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಅವರ ಮಾತನಾಡಿದರು. ‘ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ಲೋಪ ಉಂಟಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೇಸಿಗೆಯ ದಿನಗಳು ಹತ್ತಿರವಾಗುತ್ತಿದ್ದು ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯವಾಗುತ್ತದೆ’ ಎಂದು ಅವರು ಎಚ್ಚರಿಸಿದರು.
‘ತಾಲ್ಲೂಕಿನ ಬೆಳಗೊಳ ಮತ್ತು ಬೆಳಗೊಳ ಪಂಪ್ಹೌಸ್ ಬಳಿ ತಲಾ ₹1.4 ಕೋಟಿ ವೆಚ್ಚದಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣ ಕಾಮಗಾರಿಗೆ ಅವರು ಚಾಲನೆ ನೀಡಿದರು. ಬೆಳಗೊಳ ಗ್ರಾಮದಲ್ಲಿ ₹2.5 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೂ ರಮೇಶ ಬಂಡಿಸಿದ್ದೇಗೌಡ ಭೂಮಿ ಪೂಜೆ ನೆರವೇರಿಸಿದರು.
ತಹಶೀಲ್ದಾರ್ ಚೇತನಾ ಯಾದವ್, ಎಇಇ ಮಂಜುನಾಥ್, ಹೊಸಹಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶಶಿಕಲಾ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ. ಸ್ವಾಮಿಗೌಡ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಬಿ.ವಿ. ಸುರೇಶ್, ಬಿ. ರವಿಕುಮಾರ್, ತಾ.ಪಂ. ಮಾಜಿ ಅಧ್ಯಕ್ಷ ಬಿ.ಎಚ್. ಮಹದೇವಸ್ವಾಮಿ, ವಿಎಸ್ಎಸ್ಎನ್ ಅಧ್ಯಕ್ಷೆ ಸಿ.ವಿ. ಸುಪ್ರಿಯಾ, ಮುಖಂಡರಾದ ಎಂ.ಬಿ. ಕುಮಾರ್, ಮಂಜುನಾಥ್, ಪುಟ್ಟರಾಜು, ಕೆ.ಟಿ. ರಂಗಯ್ಯ, ಚಲುವರಾಜು, ವೆಂಕಟೇಶ್, ಕೃಷ್ಣಮೂರ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.