ADVERTISEMENT

ಕಲ್ಯಾಣ ಯೋಜನೆ ನಿಲ್ಲಿಸಲು ಬಿಜೆಪಿಯಿಂದ ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್‌

ಮದ್ದೂರಿನಲ್ಲಿ ಜನಾಂದೋಲನ ಸಮಾವೇಶ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 14:55 IST
Last Updated 5 ಆಗಸ್ಟ್ 2024, 14:55 IST
<div class="paragraphs"><p>ಮದ್ದೂರಿನಲ್ಲಿ ಸೋಮವಾರ ಏರ್ಪಡಿಸಿದ್ದ ಜನಾಂದೋಲನ ಸಮಾವೇಶಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್‌ ಹಾರ ಹಾಕಿ ಸ್ವಾಗತಿಸಿದರು. ಶಾಸಕ ಕೆ.ಎಂ.ಉದಯ್‌ ಇದ್ದಾರೆ&nbsp;</p></div>

ಮದ್ದೂರಿನಲ್ಲಿ ಸೋಮವಾರ ಏರ್ಪಡಿಸಿದ್ದ ಜನಾಂದೋಲನ ಸಮಾವೇಶಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್‌ ಹಾರ ಹಾಕಿ ಸ್ವಾಗತಿಸಿದರು. ಶಾಸಕ ಕೆ.ಎಂ.ಉದಯ್‌ ಇದ್ದಾರೆ 

   

–ಪ್ರಜಾವಾಣಿ ಚಿತ್ರ 

ಮದ್ದೂರು (ಮಂಡ್ಯ ಜಿಲ್ಲೆ): ‘ಇಂದಿರಾಗಾಂಧಿಯಿಂದ ಸಿದ್ದರಾಮಯ್ಯನ ಸರ್ಕಾರದವರೆಗೆ ಜಾರಿಗೊಳಿಸಿದ ಕಲ್ಯಾಣ ಯೋಜನೆಗಳಲ್ಲಿ ಒಂದೇ ಒಂದು ಯೋಜನೆಯನ್ನು ನಿಲ್ಲಿಸಲು ಪ್ರತಿಪಕ್ಷಗಳಿಗೆ ಸಾಧ್ಯವಾಗಿಲ್ಲ. ನಾವು ತಂದಿರುವ ಯೋಜನೆಗಳನ್ನು ನಿಲ್ಲಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗುಡುಗಿದರು.

ADVERTISEMENT

ಮದ್ದೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ಕಾಂಗ್ರೆಸ್‌ ವತಿಯಿಂದ ಏರ್ಪಡಿಸಿದ್ದ ‘ಜನಾಂದೋಲನ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿರಾಗಾಂಧಿ ಅವರು ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಅಶಕ್ತರಿಗೆ ಹಣ ನೀಡುವ ಕಾರ್ಯಕ್ರಮ ತಂದರು. ಉಳುವವನೇ ಭೂ ಒಡೆಯ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನೂರಾರು ಯೋಜನೆಗಳು ಬಡಜನರಿಗೆ ಶಕ್ತಿ ತುಂಬಿವೆ. ಸಿದ್ದರಾಮಯ್ಯನವರ ಸರ್ಕಾರ ಜಾರಿಗೊಳಿಸಿರುವ ‘ಪಂಚ ಗ್ಯಾರಂಟಿ’ ಯೋಜನೆಗಳಿಂದ ಸರ್ವ ಜನರಿಗೆ ಅನುಕೂಲವಾಗಿದೆ. ಇದನ್ನು ಸಹಿಸದ ಪ್ರತಿಪಕ್ಷಗಳು ಹುನ್ನಾರ ಮಾಡಿಕೊಂಡು ಪಾದಯಾತ್ರೆ ನಡೆಸುತ್ತಿವೆ. ಕುಮಾರಸ್ವಾಮಿ, ವಿಜಯೇಂದ್ರ ಯಡಿಯೂರಪ್ಪ, ಆರ್.ಅಶೋಕ್, ಎಲ್ಲಾ ಸೇರಿ ಗ್ಯಾರಂಟಿ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ’ ಎಂದರು.

ಕುಟುಂಬ ಹೇಗೆ ಬಂತು: ಎಚ್.ಡಿ. ಕುಮಾರಸ್ವಾಮಿ ಅವರ ಒಂದೊಂದೇ ಹೇಳಿಕೆಗಳಿಗೆ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡುತ್ತಾ, ಏಕವಚನದಲ್ಲೇ ಜರಿದರು. ‘ಈಗ ಪಾದಯಾತ್ರೆಯಲ್ಲಿ ಎರಡು ಹೆಜ್ಜೆ ಹಾಕಿ ಹೇಳಿಕೆ ನೀಡಿ ಏಕೆ ಓಡಿ ಹೋಗುತ್ತಾ ಇದ್ದಿಯಾ? ಅವನು ಯಾರೋ ಪ್ರೀತಂಗೌಡ ನನ್ನ ಕುಟುಂಬದ ಮರ್ಯಾದೆ ತೆಗೆದಿದ್ದಾನೆ ಎಂದು ಹೇಳಿದೆ. ಆದರೆ, ಇದಕ್ಕೂ ಮೊದಲು ರೇವಣ್ಣನದ್ದೇ ಬೇರೆ ಕುಟುಂಬ, ನನ್ನದೇ ಬೇರೆ ಕುಟುಂಬ ಎಂದು ಹೇಳಿದ್ದೇ. ಈಗ ಎಲ್ಲಿಂದ ಬಂತು ಕುಟುಂಬ? ನಾವು ನಿನ್ನ ಕುಟುಂಬದ ವಿಚಾರಕ್ಕೆ ಕೈ ಹಾಕುವುದಿಲ್ಲ. ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಬೇಡಿ ಎಂದು ಬಿಜೆಪಿಯ ದೇವರಾಜೇಗೌಡನಿಂದ ಪತ್ರ ಬರೆಸಿದವನು ನೀನೆ ಅಲ್ಲವೇ’ ಎಂದು ಪ್ರಶ್ನಿಸಿದರು.

ಅಣ್ಣ–ತಮ್ಮಂದಿರನ್ನೇ ಎಚ್‌ಡಿಕೆ ಸಹಿಸಿಲ್ಲ: ‘ಮುಖ್ಯಮಂತ್ರಿಯನ್ನಾಗಿ ಮಾಡಿದ ನಿಮ್ಮ ವಿರುದ್ಧವೇ ಕುಮಾರಸ್ವಾಮಿ ಹೀಗೆ ಮಾತನಾಡುತ್ತಿದ್ದಾರಲ್ಲಾ ಸರಿಯೇ?’ ಎಂದು ಯಾರೋ ಪ್ರಶ್ನಿಸಿದರು. ಅದಕ್ಕೆ ನಾನು ಹೇಳಿದೆ ‘ಸ್ವಂತ ಅಣ್ಣ, ತಮ್ಮಂದಿರನ್ನೇ ಸಹಿಸುವುದಿಲ್ಲ. ಇನ್ನು ನನ್ನ ಹಾಗೂ ಚಲುವರಾಯಸ್ವಾಮಿ ಅವರನ್ನು ಸಹಿಸುತ್ತಾನೆಯೇ?’ ಮಂಡ್ಯ ಸಂಸದನಾದ ಕಾರಣಕ್ಕೆ ಇಷ್ಟೆಲ್ಲಾ ಹೇಳುತ್ತಿದ್ದೇನೆ. ನಾನು ಅವನ ಮಗನನ್ನು ಗೆಲ್ಲಿಸಲು ನೋಡಿದೆ. ಆದರೆ ಜನ ಸೋಲಿಸಿದರು’ ಎಂದರು.

ಮದ್ದೂರು ಪಟ್ಟಣದಲ್ಲಿ ಸೋಮವಾರ ನಡೆದ ಬೈಕ್‌ ರ‍್ಯಾಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ನಾಯಕರು ಪಾಲ್ಗೊಂಡರು 

ಸಹಕಾರ ಕೊಡುತ್ತೇವೆ: ‘ಮಂಡ್ಯ ಮತ್ತು ಹಾಸನಕ್ಕೆ ದೊಡ್ಡ ಕೈಗಾರಿಕೆಗಳನ್ನು ತಂದು ತಲಾ 10 ಸಾವಿರ ಜನರಿಗೆ ಉದ್ಯೋಗ ನೀಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನೀವು ಈ ಕೆಲಸ ಮಾಡಿದರೆ ನನ್ನ ಹಾಗೂ ಚಲುವರಾಯಸ್ವಾಮಿ ಅವರ ಸಂಪೂರ್ಣ ಬೆಂಬಲವಿರುತ್ತದೆ’ ಎಂದು ಹೇಳಿದರು.

ಶಿವಪುರ ಸೌಧವೇ ಸಾಕ್ಷಿ: ಕಾಂಗ್ರೆಸ್ ಹೋರಾಟಕ್ಕೆ ಕುಮಾರಸ್ವಾಮಿ ಅವರ ಕ್ಷೇತ್ರದ ಹೆಬ್ಬಾಗಿನಲ್ಲೇ ಇರುವ ಶಿವಪುರ ಸತ್ಯಾಗ್ರಹ ಸೌಧವೇ ಸಾಕ್ಷಿ. ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಶಿವಪುರದ ಧ್ವಜ ಸತ್ಯಾಗ್ರಹ ಸೌಧಕ್ಕೆ ಬಿಜೆಪಿಯವರು ಒಮ್ಮೆ ಭೇಟಿ ನೀಡಬೇಕು ಎಂದು ಸಲಹೆ ನೀಡುತ್ತೇನೆ. ಆಗಿನ ಕಾಲದಲ್ಲೇ 10 ಸಾವಿರ ಜನರು ಸೇರಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಜಾಗವಿದು. ಗಂಡು ಭೂಮಿ ಮಂಡ್ಯ ನೂರಾರು ನಾಯಕರನ್ನು ರಾಜ್ಯ ರಾಜಕಾರಣಕ್ಕೆ ನೀಡಿದೆ. ಕೇಂದ್ರ ಮಂತ್ರಿ, ಮುಖ್ಯಮಂತ್ರಿಗಳಾಗಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಾಲ ಸಾಹುಕಾರ್ ಚೆನ್ನಯ್ಯ, ವೀರಣ್ಣ ಗೌಡರು, ಮಲ್ಲಯ್ಯ ಅವರು ಇತಿಹಾಸ ಸೃಷ್ಟಿಸಿದ ಭೂಮಿ ಮಂಡ್ಯ’ ಎಂದರು.

ಮೈಸೂರಿನಲ್ಲಿ ವಿಶೇಷ ಸಭೆ: ‘ಆ.9ರಂದು ಕ್ವಿಟ್ ಇಂಡಿಯಾ ಚಳವಳಿ ನಡೆದ ದಿನ. ಅಂದು ವಿಶೇಷ ರೀತಿಯಲ್ಲಿ ಮೈಸೂರಿನಲ್ಲಿ ಸಭೆ ಆಯೋಜಿಸಲಾಗಿದೆ. ಈ ಜನಾಂದೋಲನ ಸಭೆ ರಾಜ್ಯ ರಾಜಕರಣದ ಇತಿಹಾಸದ ಪುಟ ಸೇರಲಿದೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆಯನ್ನು ವಹಿಸಿಕೊಂಡು 100 ವರ್ಷಗಳಾಗಿವೆ. ಇದಕ್ಕಾಗಿ ಎಚ್.ಕೆ.ಪಾಟೀಲ್ ಅವರ ನೇತೃತ್ವದಲ್ಲಿ ಇಡೀ ವರ್ಷ ಕಾರ್ಯಕ್ರಮ ರೂಪಿಸಲಾಗಿದೆ’ ಎಂದು ತಿಳಿಸಿದರು.

ಸಮಾವೇಶದಲ್ಲಿ ಸಚಿವರಾದ ಎಚ್‌.ಕೆ.ಪಾಟೀಲ್‌, ಎಚ್‌.ಸಿ.ಮಹದೇವಪ್ಪ, ಎನ್‌.ಚಲುವರಾಯಸ್ವಾಮಿ, ಕೆ.ಎನ್‌.ರಾಜಣ್ಣ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್‌, ಶಿವಾನಂದ ಪಾಟೀಲ, ಮಧು ಬಂಗಾರಪ್ಪ, ಎಂ.ಸಿ. ಸುಧಾಕರ್‌, ಮಾಜಿ ಸಚಿವ ರಮಾನಾಥ ರೈ, ವಿನಯಕುಮಾರ ಸೊರಕೆ, ಎಸ್‌.ಆರ್‌. ಶ್ರೀನಿವಾಸ್‌, ಶಾಸಕರಾದ ಕೆ.ಎಂ.ಉದಯ್‌, ಪಿ.ರವಿಕುಮಾರ್‌, ರಮೇಶ ಬಂಡಿಸಿದ್ದೇಗೌಡ, ಎಂ.ಪಿ.ನರೇಂದ್ರಸ್ವಾಮಿ, ವಿಧಾನ ಪರಿಷತ್‌ ಸದಸ್ಯ ದಿನೇಶ ಗೂಳಿಗೌಡ, ಮುಖಂಡರಾದ ಪುಷ್ಪಾ ಅಮರನಾಥ್‌, ನಾಗರಾಜ್‌, ಗೌರಿಶಂಕರ್‌, ಮುದ್ದಹನುಮೇಗೌಡ, ಸಿ.ಡಿ.ಗಂಗಾಧರ್‌, ಕದಲೂರು ರಾಮಕೃಷ್ಣ ಮುಂತಾದವರು ಇದ್ದರು. 

ಜನಾಂದೋಲನ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಭಿಕರು
‘ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಮಾಡಿ’
ಚನ್ನಪಟ್ಟಣದಲ್ಲಿ ಒಬ್ಬರಿಗೆ ಒಂದೇ ಒಂದು ಸೈಟು ಮನೆ ರೈತರಿಗೆ ಭೂಮಿ ಕೊಟ್ಟಿಲ್ಲ. ತಮ್ಮದೇ ಪಕ್ಷದ ಕಾರ್ಯಕರ್ತರಿಗೆ ಒಂದೇ ಒಂದು ಸಹಾಯ ಮಾಡಿಲ್ಲ. ಜೆಡಿಎಸ್ ಅನ್ನು ಬಿಜೆಪಿ ಜೊತೆ ವಿಲೀನ ಮಾಡಿದರೆ ಈ ದೇಶ ಹಾಗೂ ರಾಜ್ಯಕ್ಕೆ ಒಳ್ಳೆಯದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.  ‘ಎಸ್.ಎಂ.ಕೃಷ್ಣ ಅವರ ಬಗ್ಗೆ ಮಾತನಾಡಲು ನಿಮಗೆ ಯೋಗ್ಯತೆ ಇದೆಯೇ? ನೀನು ಪಾದಯಾತ್ರೆ ಮಾಡುತ್ತಿರುವ ರಸ್ತೆ ಕೃಷ್ಣ ಅವರು ಮಾಡಿದ್ದು. ಈ ರೀತಿಯ ಒಂದೇ ಒಂದು ಕೆಲಸ ಮಾಡಿದ್ದೀಯಾ. ಸೋಮನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶ ಮಾಡಿಸಿದ್ದಾರೆ. ಅವರಂತೆ ನಿನಗೆ ಮಾಡಲು ಆಗುತ್ತದೆಯೇ? ಕೇವಲ ಖಾಲಿ ಬುಡಬುಡಕೆ ಮಾತುಗಳು ಬೇಡ’ ಎಂದರು.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ನಿದ್ದೆ ಮಾಡುತ್ತಿಲ್ಲ. ಡಿಕೆಶಿ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ಮಾಡುತ್ತಿದ್ದಾರೆ.
– ಚಲುವರಾಯಸ್ವಾಮಿ, ಕೃಷಿ ಸಚಿವ
ಸಿದ್ದರಾಮಯ್ಯ ಅಂಥ ತಪ್ಪು ಏನು ಮಾಡಿದ್ದಾರೆ?
ಸಿದ್ದರಾಮಯ್ಯ ಅವರು ಹಾಗೂ ಪತ್ನಿ ಮಾಡಬಾರದು ತಪ್ಪು ಮಾಡಿದ್ದಾರೆ ಎಂದು ಬಿಜೆಪಿ–ಜೆಡಿಎಸ್‌ ನಾಯಕರು ಬಿಂಬಿಸುತ್ತಿದ್ದಾರೆ. ಬಿಂಬಿಸಲಾಗುತ್ತಿದೆ. ಪಾರ್ವತಮ್ಮ ಅವರಿಗೆ ಅವರ ಅಣ್ಣ ಅರಿಶಿಣ ಕುಂಕುಮಕ್ಕೆ ಎಂದು ಮೂರು ಎಕರೆ ಜಮೀನು ನೀಡಿದ್ದಾರೆ. ಅದನ್ನು ‘ಮುಡಾ’ ಒತ್ತುವರಿ ಮಾಡಿಕೊಂಡ ಕಾರಣಕ್ಕೆ ಪರಿಹಾರವಾಗಿ ಸೈಟು ನೀಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದರು. ಬೈಕ್‌ ರ‍್ಯಾಲಿಯಲ್ಲಿ ಮಿಂಚಿದ ಡಿಕೆಶಿ‌ ವೇದಿಕೆ ಆರಂಭಕ್ಕೂ ಮುನ್ನ ಮದ್ದೂರು ತಾಲ್ಲೂಕಿನ ಗಡಿಭಾಗದಿಂದ ಸಭೆಯ ವೇದಿವರೆಗೂ ಡಿ.ಕೆ.ಶಿವಕುಮಾರ್‌ ಶಾಸಕ ಕೆ.ಎಂ.ಉದಯ್‌ ಸೇರಿದಂತೆ ಹಲವಾರು ನಾಯಕರು ಕಾರ್ಯಕರ್ತರೊಂದಿಗೆ ಬೈಕ್‌ ರ‍್ಯಾಲಿಯಲ್ಲಿ ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಮಧು ಜಿ.ಮಾದೇಗೌಡ ಅವರ ಗೈರು ಹಾಜರಿ ಎದ್ದು ಕಾಣುತ್ತಿತ್ತು.
ರಾಜಭವನವನ್ನು ರಾಜಕೀಯಕ್ಕೆ ಬಳಸಿ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡಿಸಲು ಪಾದಯಾತ್ರೆಯ ನಾಟಕ ಶುರು ಮಾಡಿದ್ದಾರೆ. ರಾಜಭವನದಲ್ಲಿ ಕುಳಿತವರು ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕು.
–ಎಚ್‌.ಕೆ.ಪಾಟೀಲ, ಕಾನೂನು ಸಚಿವ
‘ಗೃಹಲಕ್ಷ್ಮಿ ಹಣ ಬರುತ್ತಿಲ್ಲ’
ಡಿ.ಕೆ.ಶಿವಕುಮಾರ್ ಅವರು ಪಂಚ ಗ್ಯಾರಂಟಿ ಯೋಜನೆಗಳ ಒಂದೊಂದೇ ಹೆಸರನ್ನು ಹೇಳುತ್ತಾ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಹೇಳುತ್ತಿದ್ದಂತೆ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ‘ನಮಗೆ ಹಣ ಬರುತ್ತಿಲ್ಲ’ ಎಂದು ಜೋರಾಗಿ ಕೂಗಿದರು.  ಆಗ ಡಿ.ಕೆ.ಶಿವಕುಮಾರ್‌ ‘ಒಂದೆರಡು ತಿಂಗಳು ವ್ಯತ್ಯಾಸವಾಗಿರಬಹುದು. ಕೂಡಲೇ ಹಣ ಹಾಕಿಸಲು ಕ್ರಮ ಕೈಗೊಳ್ಳುತ್ತೇವೆ. ಬಡವರ ಮಹಿಳೆಯರ ರೈತರ ರಕ್ಷಣೆಗೆ ಈ ಸರ್ಕಾರವನ್ನು ಜನರು ಅಧಿಕಾರಕ್ಕೆ ತಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಎಷ್ಟು ವರ್ಷ ಇರುತ್ತದೆಯೋ ಅಷ್ಟು ವರ್ಷವೂ ನಮ್ಮ ತಾಯಂದಿರ ಖಾತೆಗೆ ಗೃಹಲಕ್ಷ್ಮೀ ಹಣ ಬರುತ್ತದೆ ಎಂದು ಭರವಸೆ ನೀಡಿದರು.
ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಮಾಡಿದ ಅವ್ಯವಹಾರಗಳ ಬಗ್ಗೆ ಗ್ರಂಥವನ್ನೇ ಬರೆಯಬಹುದು. ಜೆಡಿಎಸ್‌ನವರು ಇಸ್ಪೀಟ್‌ ಆಟದಲ್ಲಿ ಬಳಸುವ ಜೋಕರ್‌ ಇದ್ದ ಹಾಗೆ. ಅವರ ನಡವಳಿಕೆ ಮತ್ತು ಹೇಳಿಕೆ ಎರಡೂ ತದ್ವಿರುದ್ಧ.
– ಕೆ.ಎನ್‌.ರಾಜಣ್ಣ, ಸಹಕಾರ ಸಚಿವ
‘ನಿನ್ನ ಧಮ್ಕಿಗೆ ಮುಸ್ಲಿಮರು ಹೆದರುವುದಿಲ್ಲ’
‘ನಮಗೆ ಮತ ನೀಡದ ಮುಸ್ಲಿಮರ ಗತಿ ಏನಾಗುತ್ತದೆ ನೋಡಿ’ ಎಂದು ಕುಮಾರಸ್ವಾಮಿ ಧಮ್ಕಿ ಹಾಕಿದ್ದಾರೆ. ನೀವು ನಿಮ್ಮ ತಂದೆ ಮುಸ್ಲಿಂ ಮತದಾರರು ಇಲ್ಲದಿದ್ದರೇ ವಿಧಾನಸಭೆಗೆ ಹೋಗುತ್ತಲೇ ಇರಲಿಲ್ಲ. ಮಿಸ್ಟರ್ ಕುಮಾರಸ್ವಾಮಿ ನಿಮ್ಮ ತಂದೆ ಮುಂದಿನ ಜನ್ಮದಲ್ಲಿ ಹುಟ್ಟಿದರೆ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದರು. ಅದನ್ನು ನೆನಪಿನಲ್ಲಿಟ್ಟುಕೊಳ್ಳಿ’ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.  ‘ಕುವೆಂಪು ರಚಿಸಿದ ನಾಡಗೀತೆಯಲ್ಲಿ ಸರ್ವಜನಾಂಗದ ಶಾಂತಿಯ ತೋಟ ಎಂದು ಕರ್ನಾಟಕವನ್ನು ಕರೆಯಲಾಗಿದೆ. ನಿಮ್ಮ ಗೊಡ್ಡು ಬೆದರಿಕೆಗಳಿಗೆ ಯಾರೂ ಬಗ್ಗುವುದಿಲ್ಲ. ಎಲ್ಲಾ ಧರ್ಮದವರು ಸಹೋದರರಂತೆ ಬಾಳಬೇಕು. ನಿಮ್ಮ ಧಮ್ಕಿಗೆ ಯಾವ ಮುಸಲ್ಮಾನ ಬಂಧುಗಳೂ ಹೆದರುವುದಿಲ್ಲ’ ಎಂದು ಗುಡುಗಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.