ADVERTISEMENT

ಕಾಂಗ್ರೆಸ್‌ ಶಾಸಕರ ಸರತಿ ಸಾಲು: ಅಶೋಕ್‌

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 12:13 IST
Last Updated 1 ಜುಲೈ 2019, 12:13 IST

ಮಂಡ್ಯ: ‘ಕಾಂಗ್ರೆಸ್‌ ಶಾಸಕರು ರಾಜೀನಾಮೆ ಸಲ್ಲಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆಶ್ಚರ್ಯಕರ ರೀತಿಯಲ್ಲಿ ಇನ್ನೂ ಹಲವು ಹೆಸರುಗಳು ಹೊರಬೀಳಲಿವೆ. ಸಮ್ಮಿಶ್ರ ಸರ್ಕಾರ ಬಿದ್ದರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ’ ಎಂದು ಬಿಜೆಪಿ ಮುಖಂಡ, ಶಾಸಕ ಆರ್‌.ಅಶೋಕ್‌ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಾವು ಯಾವುದೇ ಕಾರಣಕ್ಕೂ ಆಪರೇಷನ್‌ ಕಮಲಕ್ಕೆ ಕೈ ಹಾಕುವುದಿಲ್ಲ. ತನ್ನಷ್ಟಕ್ಕೆ ತಾನೇ ಸರ್ಕಾರ ಬಿದ್ದು ಹೋಗಲಿದೆ. ಈಗಾಗಲೇ ಕಾಂಗ್ರೆಸ್‌ನ ಎರಡು ವಿಕೆಟ್‌ ಬಿದ್ದಿವೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಆಡಳಿತ, ನಡವಳಿಕೆ ವಿರುದ್ಧ ಕಾಂಗ್ರೆಸ್‌ ಶಾಸಕರು ತಿರುಗಿ ಬಿದ್ದಿದ್ದಾರೆ. ಮುಖ್ಯಮಂತ್ರಿಗಳು ಜೆಡಿಎಸ್‌–ಕಾಂಗ್ರೆಸ್‌ ಶಾಸಕರ ನಡುವೆ ತಾರತಮ್ಯ ಮಾಡುತ್ತಿದ್ದು ರಾಜೀನಾಮೆ ಪರ್ವ ಆರಂಭವಾಗಿದೆ. ಇನ್ನೊಂದು ವಾರದಲ್ಲಿ ಅಂತಿಮ ಚಿತ್ರಣ ಗೊತ್ತಾಗಲಿದೆ. ಸಮ್ಮಿಶ್ರ ಸರ್ಕಾರದ ಅಂತ್ಯಕಾಲ ಬಂದಿದೆ’ ಎಂದರು.

‘105 ಶಾಸಕರನ್ನು ಹೊಂದಿರುವ ಬಿಜೆಪಿಗೆ ನೈತಿಕ ಬಲ ಇದೆ. ಹೀಗಾಗಿ ಮಧ್ಯಂತರ ಚುನಾವಣೆಯ ಅವಶ್ಯಕತೆ ಉದ್ಬವಿಸುವುದಿಲ್ಲ. ಸಮ್ಮಿಶ್ರ ಸರ್ಕಾರದ ಕಲಹಗಳನ್ನು ನಮ್ಮ ಹೈಕಮಾಂಡ್‌ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರೂ ನಿರೀಕ್ಷೆ ಮಾಡದ ಶಾಸಕರು ರಾಜೀನಾಮೆ ನೀಡುತ್ತಾರೆ. ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್‌, ಡಾ.ಜಿ.ಪರಮೇಶ್ವರ ಅವರಿಗೆ ಮಾತ್ರ ಈ ಸರ್ಕಾರ ಬೇಕಾಗಿದೆ. ಸಿದ್ದರಾಮಯ್ಯ ಅವರಿಗೂ ಈ ಸರ್ಕಾರ ಬೇಕಾಗಿಲ್ಲ. ಯಾವಾಗ ತೊಲಗುತ್ತದೋ ಎಂದು ಅವರು ಕಾಯುತ್ತಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.