ADVERTISEMENT

ನಾರಾಯಣಗೌಡರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ: ಕಾಂಗ್ರೆಸ್ ಕಾರ್ಯಕರ್ತರ ಗದ್ದಲ

ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆತ, ಫ್ಲೆಕ್ಸ್‌, ಬಾವುಟ ಸುಟ್ಟು ಆಕ್ರೋಶ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 13:21 IST
Last Updated 6 ಮಾರ್ಚ್ 2023, 13:21 IST
ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರು ಗಲಾಟೆ ನಡೆಸುತ್ತಿರುವುದು
ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರು ಗಲಾಟೆ ನಡೆಸುತ್ತಿರುವುದು   

ಕೆ.ಆರ್‌.ಪೇಟೆ (ಮಂಡ್ಯ ಜಿಲ್ಲೆ): ಸಚಿವ ಕೆ.ಸಿ.ನಾರಾಯಣಗೌಡ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಬಾರದು ಎಂದು ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ಸೋಮವಾರ ಇಲ್ಲಿ ನಡೆದ ಪ್ರಜಾಧ್ವನಿ ಪೂರ್ವಭಾವಿ ಸಭೆಯಲ್ಲಿ ಗದ್ದಲ ಸೃಷ್ಟಿಸಿದರು, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಕಾರಿಗೆ ಮೊಟ್ಟೆ ಎಸೆದರು, ಫ್ಲೆಕ್ಸ್‌ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಕೆ.ಸಿ.ಚಂದ್ರಶೇಖರ್‌ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭಗೊಳ್ಳುತ್ತಿದ್ದಂತೆ ಮುಖಂಡರ ವಿರುದ್ಧ ಕಾರ್ಯಕರ್ತರು ಹರಿಹಾಯ್ದರು. ‘ಸಚಿವ ನಾರಾಯಣಗೌಡರು ಕಾಂಗ್ರೆಸ್‌ ಟಿಕೆಟ್‌ ತರುವುದಾಗಿ ಹೇಳುತ್ತಿದ್ದಾರೆ, ನೀವು ಇಲ್ಲಿ ಯಾವ ಪುರುಷಾರ್ಥಕ್ಕೆ ಸಭೆ ನಡೆಸುತ್ತಿದ್ದೀರಿ? ಅವರು ಕಾಂಗ್ರೆಸ್‌ ಪಕ್ಷಕ್ಕೆ ಬಂದರೆ ಸಭೆ, ಸಮಾರಂಭಗಳ ಮೇಲೆ ಕಲ್ಲು ಹೊಡೆಯುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಈಗಾಗಲೇ ಮೂರು ಪಕ್ಷ ನೋಡಿರುವ ನಾರಾಯಣಗೌಡರು ಅಧಿಕಾರಕ್ಕಾಗಿ ಕಾಂಗ್ರೆಸ್‌ ಪಕ್ಷ ಸೇರಲು ತೆರೆಮರೆಯಲ್ಲಿ ಯತ್ನಿಸುತ್ತಿದ್ದಾರೆ. ನೀವು ಹೋಗಿ ಬಳೆ ತೊಟ್ಟುಕೊಳ್ಳಿ. ಮೊದಲು ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಿ, ಇಲ್ಲದಿದ್ದರೆ ಸಭೆಯಿಂದ ಹೊರಡಿ, ಮತ್ತೆ ಬರಬೇಡಿ’ ಎಂದು ಮುಖಂಡರಿಗೆ ತಾಕೀತು ಮಾಡಿದರು.

ADVERTISEMENT

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಕುರ್ಚಿಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಜಿಲ್ಲಾ ಘಟಕದ ಅಧ್ಯಕ್ಷರ ಕಾರಿಗೆ ಮೊಟ್ಟೆ ಎಸೆದರು.

ಪ್ರಜಾಧ್ವನಿ ಯಾತ್ರೆ ಅಂಗವಾಗಿ ಅಳವಡಿಸಿದ್ದ ಫ್ಲೆಕ್ಸ್‌, ಬಾವುಟಗಳನ್ನು ಸುಟ್ಟು ಹಾಕಿದರು. ಗೊಂದಲದ ಗೂಡಾದ ಕಾರಣ ಸಭೆ ಅರ್ಧಕ್ಕೆ ಮೊಟಕುಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.