
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ‘ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016’ರ ಅನುಷ್ಠಾನ ಕುರಿತ ಸಮಾಲೋಚನಾ ಕಾರ್ಯಕ್ರಮವನ್ನು ಸಿಇಒ ಕೆ.ಆರ್.ನಂದಿನಿ ಉದ್ಘಾಟಿಸಿದರು.
ಮಂಡ್ಯ: ‘ವಿಶೇಷ ಚೇತನರಿಗಾಗಿ ಸರ್ಕಾರ ನೀಡುವ ಕೌಶಲ, ಉದ್ಯೋಗ ಸೇರಿದಂತೆ ಹಲವು ಸೌಲಭ್ಯಗಳನ್ನು ತಲುಪಿಸಬೇಕು. ವಿಶೇಷ ಚೇತನರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ‘ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016’ರ ಅನುಷ್ಠಾನ ಕುರಿತು ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮತ್ತು ಸ್ವಯಂಸೇವಾ ಸಂಸ್ಥೆಗಳ ಮುಖಂಡರೊಂದಿಗೆ ಸಮಾಲೋಚನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಕ್ಕಳಿಗಾಗಿ ಏರ್ಪಡಿಸಲಾಗಿರುವ ಉಚಿತ ಬೇಸಿಗೆ ಶಿಬಿರದಲ್ಲಿ ಸುಮಾರು 12,000 ಮಕ್ಕಳು ಪಾಲ್ಗೊಂಡಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದರು.
ಮಕ್ಕಳ ನಂತರ ವಿಶೇಷ ಚೇತನ ಸಮುದಾಯ ಅಭಿವೃದ್ಧಿ ಹೊಂದಬೇಕೆನ್ನುವುದು ನಮ್ಮ ಆಶಯ. ಈ ನಿಟ್ಟಿನಲ್ಲಿ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಹಕರಿಸಬೇಕು ಎಂದು ತಿಳಿಸಿದರು.
ಅಂಗವಿಕಲರ ಆಯೋಗದ ಆಯುಕ್ತ ದಾಸ್ ಸೂರ್ಯವಂಶಿ ಮಾತನಾಡಿ, ‘ರಾಜ್ಯದಲ್ಲಿಯೇ ಮೊದಲ ಬಾರಿಗೆ ಜಿಲ್ಲಾ, ತಾಲ್ಲೂಕು ಮತ್ತು ಪಂಚಾಯಿತಿ ಮಟ್ಟದ ಅಧಿಕಾರಿಗಳು ಒಟ್ಟಾಗಿ ವಿಶೇಷಚೇತರರ ಏಳಿಗೆಗಾಗಿ ಭಾಗಿಯಾಗಿರುವುದು ಸಂತೋಷದ ವಿಷಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆ ಮಹಿಳಾ ಅಭಿವೃದ್ಧಿಗಾಗಿ, ಮಕ್ಕಳ ಅಭಿವೃದ್ಧಿಗಾಗಿ, ಮತ್ತು ವಿಶೇಷ ಚೇತನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಎಲ್ಲಾ ಅಭಿವೃದ್ಧಿ ಹಂತದಲ್ಲೂ ಮಂಡ್ಯ ಜಿಲ್ಲೆ ಇತಿಹಾಸ ಸೃಷ್ಟಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪುಷ್ಪಾ, ಸಹಾಯಕ ಕಾರ್ಯದರ್ಶಿ ಚಂದ್ರು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅನುಷ್ಠಾನ ಅಧಿಕಾರಿಗಳು ಮತ್ತು ವಿಶೇಷಚೇತನರ ಸಂಘ, ಸಂಸ್ಥೆಯ ಸದಸ್ಯರು ಇದ್ದರು.
‘ಪೌಷ್ಟಿಕ ಆಹಾರ ಸೇವಿಸಿ’
‘ಅಪೌಷ್ಟಿಕತೆಯಿಂದ ಮಗು ಅಂಗವೈಕಲ್ಯ ಸೇರಿದಂತೆ ಇನ್ನಿತರೆ ರೋಗಗಳಿಗೆ ಒಳಗಾಗುವ ಸಂಭವವಿರುತ್ತದೆ. ಮಹಿಳೆಯರಿಗೆ ವಿಶೇಷ ಪೋಷಕಾಂಶ ಆರೈಕೆ ಮತ್ತು ವ್ಯಾಕ್ಸಿನ್ ಒದಗಿಸುವಲ್ಲಿ ಮಹಿಳಾ ಮತ್ತು ಆರೋಗ್ಯ ಇಲಾಖೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಸಿಇಒ ಕೆ.ಆರ್.ನಂದಿನಿ ಸಲಹೆ ನೀಡಿದರು. ಮಂಡ್ಯದಲ್ಲಿ ಮೊದಲ ಬಾರಿಗೆ ವಿಕಲಚೇತನರ ವಿದ್ಯಾಭ್ಯಾಸಕ್ಕೆ ಹಾಗೂ ಅವರ ಜ್ಞಾನ ಭಂಡಾರಕ್ಕೆ ಅನುಕೂಲವಾಗಲು ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲೂ ವಿಕಲಚೇತನರಿಗಾಗಿಯೇ ಗ್ರಂಥಾಲಯಗಳನ್ನು ತೆರೆಯಲು ನಿರ್ಧರಿಸಿದ್ದು ಅದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.