ಮದ್ದೂರು: ‘ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವನ ಪರ್ಯಂತ ಶಿಕ್ಷೆಯ ತೀರ್ಪು ನೀಡಿದ್ದು, ನ್ಯಾಯಾಲಯದ ತೀರ್ಪಿಗೆ ಯಾರೇ ಆದರೂ ತಲೆಬಾಗಬೇಕು. ಗೌರವಿಸಬೇಕಾಗುತ್ತದೆ’ ಎಂದು ಶಾಸಕ ಕೆ.ಎಂ ಉದಯ್ ತಿಳಿಸಿದರು.
ತಾಲ್ಲೂಕಿನ ಹೂತಗೆರೆ ಗ್ರಾಮದ ಬಳಿಯಿರುವ ಮದ್ದೂರಿನ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕಿಸುವ ₹1.12 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
‘ಪಟ್ಟಣದ ಪೇಟೆ ಬೀದಿ ವಿಸ್ತರಣೆ ಕಾಮಗಾರಿ ಮುಂದಿನ ಮೂರರಿಂದ ನಾಲ್ಕು ತಿಂಗಳ ಬಳಿಕ ಆರಂಭವಾಗುವುದು. ಪಟ್ಟಣ ಬೆಳೆಯುತ್ತಿರುವುದರಿಂದ ಕಸವೂ ಹೆಚ್ಚಾಗುತ್ತಿದೆ. ಆದ್ದರಿಂದ ಈ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ’ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಆರೋಪದ ಹಿನ್ನೆಲೆಯಲ್ಲಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಭಾಗವಹಿಸಿಸುವುದಾಗಿ ತಿಳಿಸಿದರು.
ಈ ವೇಳೆ ಪುರಸಭಾಧ್ಯಕ್ಷೆ ಕೋಕಿಲಾ ಅರುಣ್, ಪುರಸಭಾ ಸದಸ್ಯರು, ಮುಖಂಡರಾದ ದುಂಡನಹಳ್ಳಿ ಯೋಗೇಶ್, ಪಿಡಿಒ ಮಧುಸೂದನ್ ಸೇರಿದಂತೆ ಪುರಸಭೆಯ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.