ಮಂಡ್ಯ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಬುಧವಾರ ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಮಂಡ್ಯದ 55 ವರ್ಷದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಸಮಸ್ಯೆಯೂ ಇತ್ತು. ಅವರಿಗೆ ಕೋವಿಡ್ ದೃಢಪಟ್ಟಿತ್ತು. ಅವರನ್ನು ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ಧಾರೆ. ಕೋವಿಡ್ ಕಾರ್ಯಸೂಚಿಯಂತೆ ಕುವೆಂಪುನಗರದ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
‘ಕೋವಿಡ್ನಿಂದ ಮೃತಪಟ್ಟವರ ಶವಸಂಸ್ಕಾರಕ್ಕಾಗಿ ಜಾಗ ಗುರುತಿಸಲಾಗುತ್ತಿದೆ. ಅಂತ್ಯಸಂಸ್ಕಾರಕ್ಕೆ ಸ್ಥಳೀಯರು ಯಾವುದೇ ಕಾರಣಕ್ಕೂ ಅಡ್ಡಿ ಮಾಡಬಾರದು ಎಂದು ಜಾಗೃತಿ ಮೂಡಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ತಿಳಿಸಿದರು.
37 ಮಂದಿಗೆ ಕೋವಿಡ್: ಬುಧವಾರ ಹೊಸದಾಗಿ 37 ಮಂದಿಯಲ್ಲಿ ಕೋವಿಡ್–19 ಕಂಡುಬಂದಿದ್ದು ಜಿಲ್ಲೆಯಲ್ಲಿ ಒಟ್ಟು ರೋಗಿಗಳ ಸಂಖ್ಯೆ 960ಕ್ಕೆ ಏರಿಕೆಯಾಗಿದೆ. ಹೊರ ಜಿಲ್ಲೆಗಳಿಂದ ಬಂದ ಬಹುತೇಕ ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ. ಸೋಂಕಿತರ ಪ್ರಥಮ ಸಂಪರ್ಕಿತರಿಗೂ ಸೋಂಕು ಕಾಣಿಸಿಕೊಂಡಿದೆ. ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಟ್ಟು ರೋಗಿಗಳಲ್ಲಿ 695 ಮಂದಿ ಕೋವಿಡ್ ವಿರುದ್ಧ ಗೆಲುವು ಸಾಧಿಸಿದ್ದಾರೆ. 258 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ.
ಬುಧವಾರದ ಸೋಂಕಿತರ ವಿವರ
ಮಂಡ್ಯ– 11
ಶ್ರೀರಂಗಪಟ್ಟಣ– 09
ಮಳವಳ್ಳಿ–04
ಮದ್ದೂರು– 05
ನಾಗಮಂಗಲ– 03
ಪಾಂಡವಪುರ– 02
ಕೆ.ಆರ್.ಪೇಟೆ– 01
ಅನ್ಯಜಿಲ್ಲೆ– 2
ಒಟ್ಟು– 37
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.