ADVERTISEMENT

ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಮಾಡಿದ ಡಿ.ಸಿ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 20:00 IST
Last Updated 7 ನವೆಂಬರ್ 2019, 20:00 IST
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಮಾಡಿದರು
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಮಾಡಿದರು   

ಮಂಡ್ಯ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಬುಧವಾರ ರಾತ್ರಿಯವರೆಗೂ ನಗರದ ವಿವಿಧೆಡೆ ಪ್ರದಕ್ಷಿಣೆ ಹಾಕಿದರು. ಅಭಿವೃದ್ಧಿ ಕಾಮಾಗಾರಿಗಳ ಪರಿಶೀಲನೆ ನಡೆಸಿದರು. ಇಂದಿರಾ ಕ್ಯಾಂಟೀನ್‌ನಲ್ಲಿ ರಾತ್ರಿಯ ಊಟ ಸವಿದರು.

ನಗರದ ವಿವಿಧ ಬಡಾವಣೆ, ಸರ್ಕಲ್‌, ರಸ್ತೆಗಳಿಗೆ ಭೇಟಿ ನೀಡಿ ಸ್ವಚ್ಛತೆಯ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಹೊಸಹಳ್ಳಿ ವೃತ್ತದಲ್ಲಿ ನಾಲ್ಕು ರಸ್ತೆಗಳ ಸಮೀಪ ಉದ್ಯಾನ ರೂಪಿಸಿ ಅಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಪ್ರತಿಷ್ಠಾಪಿಸುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಆ ಜಾಗದಲ್ಲಿ ಸುಂದರ ಪರಿಸರ ರೂಪಿಸುವ ಕುರಿತು ಮಾತುಕತೆ ನಡೆಸಿದರು.

ಮೈಸೂರಿನ ಕೆ.ಆರ್‌.ಸರ್ಕಲ್‌ ಮಾದರಿಯಲ್ಲಿ ಸಂಜಯ ವೃತ್ತವನ್ನು ಅಭಿವೃದ್ಧಿಗೊಳಿಸುವ ಕುರಿತು ಸಿಬ್ಬಂದಿಯ ಜೊತೆ ಮಾತುಕತೆ ನಡೆಸಿದರು. ಪ್ರತಿಭಟನೆ ಸೇರಿ ಇನ್ನಿತರ ಸಮಾರಂಭಗಳ ಆಯೋಜನೆ ಮಾಡಲು ಅನುಕೂಲವಾಗುವಂತೆ ವೃತ್ತ ಅಭಿವೃದ್ಧಯಾಗಬೇಕು. ಅದಕ್ಕೆ ಸಂಬಂಧಿಸಿದಂತೆ ಡಿಪಿಆರ್‌ ಸಲ್ಲಿಸುವಂತೆ ಸೂಚನೆ ನೀಡಿದರು.

ADVERTISEMENT

ಖಾಸಗಿ ಬಸ್‌ ನಿಲ್ದಾಣ ಕೆರೆಯಂತಾಗಿದ್ದು ಅದಕ್ಕೆ ಕಾಯಕಲ್ಪ ನೀಡುವ ಕುರಿತು ಪರಿಶೀಲನೆ ನಡೆಸಿದರು. ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿಯ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು. ಹಾಲಹಳ್ಳಿ ಕೊಳೆಗೇರಿ ನಿವಾಸಿಗಳಿಗಾಗಿ ನಿರ್ಮಾಣಗೊಳ್ಳುತ್ತಿರುವ ಮನೆ ಕಾಮಗಾರಿ ಪರಿಶೀಲನೆ ನಡೆಸಿದರು. ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಶ್ರಮಿಕರಿಗೆ ಹಸ್ತಾಂತರ ಮಾಡುವಂತೆ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಮಂಡ್ಯ ನಗರದ ಅಭಿವೃದ್ಧಿಗಾಗಿ ₹ 50 ಕೋಟಿ ಹಣ ಮಂಜೂರಾಗಿದೆ. ಹೀಗಾಗಿ ನಗರಕ್ಕೆ ಅವಶ್ಯಕವಾಗಿ ಬೇಕಾದ ಮೂಲ ಅವಶ್ಯಕತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನ’ ಎಂದು ಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಎಸ್‌.ಲೋಕೇಶ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ಕಾರ್ಯಪಾಲಕ ಎಂಜಿನಿಯರ್‌ ಪ್ರತಾಪ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.