
ಮದ್ದೂರು: ನಗರದ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಕುಮಾರ ಇತ್ತೀಚೆಗೆ ಡಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಕಚೇರಿಯ ವಿವಿಧ ಶಾಖೆಗಳನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳ ಕಾರ್ಯ ನಿರ್ವಹಣೆ, ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಹಾಗೂ ಸಿಬ್ಬಂದಿ ಹಾಜರಾತಿ ಬಗ್ಗೆ ಮಾಹಿತಿ ಪಡೆದರು. ಸಾರ್ವಜನಿಕರ ಅರ್ಜಿಗಳನ್ನು ಗಂಭೀರವಾಗಿ ಪರಿಗಣಿಸಿ ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.
ಬಾಕಿಯಿರುವ ಎಲ್ಲಾ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ, ಡಿಜಿಟಲ್ ಕಾರ್ಯವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕರ ಅನಗತ್ಯ ಅಲೆದಾಟ ತಪ್ಪಿಸುವ ಉದ್ದೇಶದಿಂದ, ಆದಾಯ ಮತ್ತು ಜಾತಿ ಪ್ರಮಾಣಪತ್ರ, ಭೂಹಿಡುವಳಿ ಪ್ರಮಾಣಪತ್ರ, ವಂಶವೃಕ್ಷ, ನಿವಾಸ ಪ್ರಮಾಣಪತ್ರ ಸೇರಿದಂತೆ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಿಸಿದ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದರು.
ಹೋಬಳಿ ಮಟ್ಟದ ಎಲ್ಲಾ ಸಿಬ್ಬಂದಿಯು ಕೇಂದ್ರಸ್ಥಾನದಲ್ಲಿಯೇ ಕಡ್ಡಾಯವಾಗಿ ಲಭ್ಯವಿದ್ದು, ಸಾರ್ವಜನಿಕರ ಮನವಿಗಳಿಗೆ ತ್ವರಿತ ಸ್ಪಂದನೆ ನೀಡಬೇಕೆಂದು ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದ ಅವರು ಕಚೇರಿಗೆ ನಿಗದಿತ ಸಮಯಕ್ಕೆ ಹಾಜರಾಗುವುದು, ಐಡಿ ಕಾರ್ಡ್ ಧರಿಸುವಿಕೆ, ಸ್ವಚ್ಛತೆ ಕಾಪಾಡುವುದು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದು ಕಡ್ಡಾಯ ಎಂದು ಸೂಚಿಸಿದರು.
ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಆಧಾರ್ ಸೀಡಿಂಗ್, ಇ-ಪೌತಿ ಖಾತಾ ಆಂದೋಲನ, ನಮೂನೆ 1 ರಿಂದ 5, ಕಡತಗಳ ವಿಲೇವಾರಿ, ಸಕಾಲ ಸೇವೆಗಳು, ನ್ಯಾಯಾಲಯ ಪ್ರಕರಣಗಳು, ಒತ್ತುವರಿ ತೆರವು, ಭೂ ಸುರಕ್ಷ, 11ಇ ತಿದ್ದುಪಡಿ, ಬಗರ್ ಹುಕ್ಕುಂ ಅರ್ಜಿಗಳ ವಿಲೇವಾರಿ ಹಾಗೂ ಹಕ್ಕುಪತ್ರ ವಿತರಣೆಗಳ ಪ್ರಗತಿಯನ್ನು ಪರಿಶೀಲಿಸಿದರು.
ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಗ್ರೇಡ್ 2ತಹಶೀಲ್ದಾರ್ ಸೋಮಶೇಖರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.