ಮಂಡ್ಯ: ಜಿಲ್ಲೆಯಲ್ಲಿ ಒಂದು ವಾರದಿಂದ ಭಾರಿ ಮಳೆ ಸುರಿದು ಉಂಟಾದ ಪ್ರವಾಹದಿಂದಾಗಿ ಹಾನಿಗೊಳಗಾದ ಸ್ಥಳಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಸೋಮವಾರ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ‘ನಮ್ಮ ಜನ ನಮ್ಮ ಧ್ವನಿ’ ವರದಿಯಿಂದ ಎಚ್ಚೆತ್ತಕೊಂಡ ಜಿಲ್ಲಾಧಿಕಾರಿ, ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ನೆರವು ನೀಡುವ ಭರವಸೆ ನೀಡಿದರು. ಹಾನಿಗೊಳಗಾದ ಪ್ರದೇಶಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ ಸ್ಥಳೀಯರಿಂದಲೂ ಮಾಹಿತಿ ಪಡೆದುಕೊಂಡರು.
ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಯಿಂದ ಜಿಲ್ಲೆಯಲ್ಲಿ ಕೆಲವು ಮನೆಯ ಗೋಡೆಗಳು ಕುಸಿದು ಬಿದ್ದಿರುವ ಬಗ್ಗೆಯೂ ಅಧಿಕಾರಿಗಳು ತಿಳಿಸಿದರು. ಮನೆ ಗೋಡೆ ಕುಸಿದು ಬಿದ್ದಿರುವ ಸ್ಥಳಗಳಿಗೆ ಭೇಟಿ ನೀಡಿದರು.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯು ತ್ತಿರುವ ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ವಿವಿಧ ತಾಲ್ಲೂಕಿನ ಗ್ರಾಮ ಗಳಾದ ಬೆಳಗೊಳ, ನೆಲಮನೆ, ಬಲ್ಲೇನ ಹಳ್ಳಿ, ಚಂದಗಿರಿಕೊಪ್ಪಲು, ಚಿಕ್ಕಾಡೆ, ಪಾಂಡವಪುರ ಪಟ್ಟಣ ಪ್ರದೇಶಗಳಿಗೆ ಭೇಟಿ ನೀಡಿ ಕೃಷಿ, ಆಸ್ತಿ ಮತ್ತು ಮನೆಗಳಿಗೆ ಉಂಟಾಗಿರುವ ಹಾನಿಯ ಬಗ್ಗೆಯೂ ಪರಿವೀಕ್ಷಣೆ ನಡೆಸಿದರು.
ಉಪವಿಭಾಗಾಧಿಕಾರಿ ಬಿ.ಸಿ.ಶಿವಾ ನಂದಮೂರ್ತಿ, ತಹಶೀಲ್ದಾರ್ ಗಳಾದ ಶ್ವೇತಾ ಎನ್.ರವೀಂದ್ರ, ಪ್ರಮೋದ್ ಪಾಟೀಲ್, ಜಂಟಿ ಕೃಷಿ ನಿರ್ದೇಶಕ ಬಿ.ಎಸ್.ಚಂದ್ರಶೇಖರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.