ಮಂಡ್ಯ: ರಾಮನಗರ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕು. ಜೊತೆಗೆ ಕುಟುಂಬಕ್ಕೆ ₹ 25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮಹಿಳಾ ಕೃಷಿ ಕೂಲಿಕಾರರ ಉಪ ಸಮಿತಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಆ ಬಾಲಕಿಯನ್ನ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಇಡೀ ದೇಶವೇ ತಲೆತಗ್ಗಿಸುವಂತಿದೆ. ಇದರಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವೂ ಎದ್ದು ಕಾಣುತ್ತಿದೆ. ನ್ಯಾಯ ಕೇಳಲು ಹೋದ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಲು ಮುಂದಾಗುವುದು ಏಕೆ, ಇದು ಹೀಗೆ ಮುಂದುವರಿದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಆ ನೊಂದ ಕುಟುಂಬಕ್ಕೆ ಪರಿಹಾರ ನೀಡುವ ಮೂಲಕ ಸರ್ಕಾರ ಸಾಂತ್ವನ ಹೇಳಬೇಕು. ಪೊಲೀಸರು ನಡೆಸಿರುವ ದೌರ್ಜನ್ಯದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ. ಶಿವಮಲ್ಲಯ್ಯ, ಪ್ರಧಾನ ಕಾರ್ಯದರ್ಶಿ ಬಿ. ಹನುಮೇಶ್, ಮುಖಂಡರಾದ ಅಮಾಸಯ್ಯ, ರಾಮಯ್ಯ, ಶಿವಕುಮಾರ್, ಟಿ.ಎಚ್. ಆನಂದ್, ಕಪನಿಗೌಡ, ಲಕ್ಷ್ಮಿ ಕುಂತೂರು, ಗೌರಮ್ಮ, ನಂಜೇಗೌಡ, ಮಂಚೇಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.