ADVERTISEMENT

ಮಂಡ್ಯ: 17 ಡೆಂಗಿ, 4 ಚಿಕೂನ್‌ಗುನ್ಯಾ ಪತ್ತೆ

ಶಾಲಾ– ಕಾಲೇಜುಗಳಲ್ಲಿ ಜಾಗೃತಿ ಮೂಡಿಸಿ, ಸೊಳ್ಳೆ ಸಂತಾನೋತ್ಪತ್ತಿ ತಾಣ ನಾಶಪಡಿಸಿ: ಡಿಸಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 13:41 IST
Last Updated 23 ಜೂನ್ 2025, 13:41 IST
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡೆಂಗಿ ರೋಗ ನಿಯಂತ್ರಣ ಕುರಿತು ಸೋಮವಾರ ಆಯೋಜಿಸಿದ್ದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು 
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡೆಂಗಿ ರೋಗ ನಿಯಂತ್ರಣ ಕುರಿತು ಸೋಮವಾರ ಆಯೋಜಿಸಿದ್ದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು    

ಮಂಡ್ಯ: ‘ಡೆಂಗಿ, ಮಲೇರಿಯಾ, ಚಿಕುನ್‌ಗುನ್ಯಾ ಮುಂತಾದ ಸಾಂಕ್ರಾಮಿಕ ರೋಗಗಳು ಸೊಳ್ಳೆಗಳ ಕಡಿತದಿಂದ ಉಂಟಾಗುತ್ತವೆ. ರೋಗ ಹೆಚ್ಚಾಗಿ ಹರಡುವ ಸ್ಥಳಗಳನ್ನು ಗುರುತಿಸಿ ಪ್ರತಿ ಶುಕ್ರವಾರ ನೀರಿನ ಮಾದರಿಗಳನ್ನು ಪಡೆದು ಲಾರ್ವಾ ಸಮೀಕ್ಷೆ ನಡೆಸಿ’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಡೆಂಗಿ ರೋಗ ನಿಯಂತ್ರಣ ಕುರಿತು ಸೋಮವಾರ ಆಯೋಜಿಸಿದ್ದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡೆಂಗಿ ರೋಗ ಉಂಟು ಮಾಡುವ ಈಡೀಸ್ ಲಾರ್ವಾ ಸಮೀಕ್ಷೆಯಲ್ಲಿ ಕಂಡು ಬಂದಲ್ಲಿ ತಕ್ಷಣ ಅವುಗಳ ಉತ್ಪತ್ತಿಯಾಗದಂತೆ ತಡೆಗಟ್ಟಬೇಕು ಎಂದರು.

ಕಟ್ಟಡ ನಿರ್ಮಿಸುವ ಪ್ರದೇಶಗಳಲ್ಲಿ, ಗ್ಯಾರೇಜ್ ಗಳಲ್ಲಿ, ದನ- ಕರು ಸಾಕಾಣಿಕೆ ಪ್ರದೇಶ, ಗುಜರಿ, ಎಳನೀರು ಮಾರುವ ಸ್ಥಳ, ನೀರಿನ ತೊಟ್ಟಿಗಳು ಹಾಗೂ ನೀರು ನಿಲುಗಡೆಯಾಗುವ ಪ್ರದೇಶಗಳಲ್ಲಿ ಡೆಂಗಿ ಜ್ವರವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದರು.

ADVERTISEMENT

ಜಿಲ್ಲೆಯಲ್ಲಿ 2025ರ ಜನವರಿಯಿಂದ ಇಲ್ಲಿಯವರೆಗೆ 17 ಡೆಂಗಿ ಪ್ರಕರಣಗಳು, 4 ಚಿಕುನ್‌ಗುನ್ಯಾ ಪ್ರಕರಣಗಳು ವರದಿಯಾಗಿವೆ. ಆಸ್ಪತ್ರೆಗಳಲ್ಲಿ ಡೆಂಗಿ ಪ್ರಕರಣಗಳಿಗಾಗಿ ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಮಾಡಿ. ವೈದ್ಯರು ಸೂಕ್ತ ಔಷಧೋಪಚಾರ ನೀಡಿರುತ್ತಾರೆ. ಸಾರ್ವಜನಿಕರು ರೋಗ ಬರುವ ಮೊದಲೇ ಮುನ್ನಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕಾಂತರಾಜು, ನಿವೃತ್ತ ಡಿ.ಎಚ್.ಒ ಡಾ.ಮರಿಗೌಡ, ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಆಶಾಲತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ ಹಾಗೂ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಹರ್ಷ ಪಾಲ್ಗೊಂಡಿದ್ದರು. 

ಲಾರ್ವಾ ಸಮೀಕ್ಷೆಗೆ ಸಾರ್ವಜನಿಕರು ಸಹಕರಿಸದಿದ್ದರೆ ಹಾಗೂ ಸಮೀಕ್ಷೆ ನಂತರ ತಮ್ಮ ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡದಿದ್ದಲ್ಲಿ ದಂಡ ವಿಧಿಸಲಾಗುವುದು
ಕುಮಾರ ಜಿಲ್ಲಾಧಿಕಾರಿ ಮಂಡ್ಯ

‘ಕಾರ್ಮಿಕರಿಗೆ ಜಾಗೃತಿ ಮೂಡಿಸಿ’

ಸಕ್ಕರೆ ಕಾರ್ಖಾನೆಗಳಿಗೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಕಬ್ಬು ಕಟಾವು ಕಾರ್ಮಿಕರು ಜಿಲ್ಲೆಗೆ ಆಗಮಿಸಿದ್ದು ಕಾರ್ಮಿಕ ಇಲಾಖೆ ಅವರು ಕಾರ್ಮಿಕರಿಗೆ ಎಲ್ಲಾ ಮೂಲಸೌಕರ್ಯ ಒದಗಿಸಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ ಹಾಗೂ ಅವರು ವಾಸಿಸುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು. ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಡಿಪೊಗಳಲ್ಲಿ ನಿರುಪಯುಕ್ತ ಟೈರ್‌ ಹಾಗೂ ಹಳೆ ಯಂತ್ರೋಪಕರಣಗಳಿದ್ದಲ್ಲಿ ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.