ಪಾಂಡವಪುರ: ಸಹಕಾರ ಸಂಘಗಳ ಅಭಿವೃದ್ಧಿ ಸಂಬಂಧ ವಿಧಾನ ಮಂಡಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ಸಿದ್ಧತೆ ನಡೆಸಿದ್ದೇನೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ₹5ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮು ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವೃದ್ದಿ ಹೊಂದಿದರೆ ಮಾತ್ರ ರೈತರಿಗೆ ಅನುಕೂಲವಾಗಲಿದ್ದು, ಹೀಗಾಗಿ ಸರ್ಕಾರವು ಸಹಕಾರ ಸಂಘಗಳ ಅಭಿವೃದ್ದಿಗೆ ಪೂರಕವಾದ ಯೋಜನೆ ರೂಪಿಸಿ ಅನುದಾನ ನೀಡಬೇಕು. ಇದರಿಂದ ಸಂಘಗಳು ಬೆಳವಣಿಗೆ ಕಾಣಲು ಸಾಧ್ಯ’ ಎಂದರು.
ಗ್ರಾಮಸ್ಥರ ಮನವಿಯಂತೆ ಗೋದಾಮು ನಿರ್ಮಾಣಕ್ಕೆ ₹5 ಲಕ್ಷ ನೀಡಿದ್ದು, ಮತ್ತಷ್ಟು ಅನುದಾನ ನೀಡಲಾಗುವುದು. ಜತೆಗೆ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ₹60ಲಕ್ಷ ಅನುದಾನ ನೀಡಲಾಗಿದೆ. ದೇವೇಗೌಡನಕೊಪ್ಪಲು ಗ್ರಾಮದ ರಸ್ತೆ ಅಭಿವೃದ್ದಿಗೆ ₹2 ಲಕ್ಷ, ಚಿಕ್ಕಾಡೆಯಿಂದ ಹರಳಹಳ್ಳಿ ಗ್ರಾಮಕ್ಕೆ ಸಂಪರ್ಕ ರಸ್ತೆಯ ಅಭಿವೃದ್ದಿಗೆ ಶೀಘ್ರವೇ ಚಾಲನೆ ನೀಡಲಾಗುವುದು’ ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವೇಗೌಡ ಮಾತನಾಡಿ, ‘ತಾಲ್ಲೂಕಿನ ಬಹುತೇಕ ಸಹಕಾರ ಸಂಘದಲ್ಲಿ ಭ್ರಷ್ಟಾಚಾರ ನಡೆದಿದೆ. ರೈತರ ಹಣ ಲಪಟಾಯಿಸುವ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.
ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರವೀಂದ್ರಸ್ವಾಮಿ, ಉಪಾಧ್ಯಕ್ಷ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಷತಾ, ಸದಸ್ಯ ಅವಿನಾಶ್, ಮುಖಂಡರಾದ ಪ್ರೊ.ಡಿ.ಕೆ. ದೇವೇಗೌಡ, ಸಿ.ಎಂ. ವಿಜೇಂದ್ರ, ಸಿ.ಎಂ. ಮಹೇಶ್, ಸಿ.ವಿ. ಗಿರೀಗೌಡ, ಕೃಷ್ಣೇಗೌಡ, ಸಿ.ಬಿ.ರಮೇಶ್, ಕಾರ್ಯದರ್ಶಿ ರಜಿನಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.