ADVERTISEMENT

ಡಿಕೆಶಿ ವಿಚಾರಣೆಯಲ್ಲಿ ರಾಜಕಾರಣ ಇಲ್ಲ: ಸದಾನಂದಗೌಡ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2019, 11:28 IST
Last Updated 31 ಆಗಸ್ಟ್ 2019, 11:28 IST
   

ಮಂಡ್ಯ: ‘ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸುತ್ತಿರುವ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿಲ್ಲ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಶನಿವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಶಿವಕುಮಾರ್‌ ಅವರು ಅಕ್ರಮವಾಗಿ ಹಣ ಸಂಪಾದನೆ ಮಾಡಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣ ಇಂದು, ನಿನ್ನೆಯದಲ್ಲ. ದೇಶದಲ್ಲಿ ಯಾರೇ ಅಕ್ರಮವಾಗಿ ಹಣ ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಶಿವಕುಮಾರ್‌ ಅವರ ಅರ್ಜಿ ತಿರಸ್ಕೃತವಾದ ಕಾರಣ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ’ ಎಂದರು.

‘ಕಾಂಗ್ರೆಸ್‌ ಪಕ್ಷ ಅವಸಾನದ ಅಂಚಿನಲ್ಲಿದೆ. ಮಧ್ಯಪ್ರದೇಶದ ಕಾಂಗ್ರೆಸ್‌ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತ್ಯಜಿಸುವ ಮಾತುಗಳನ್ನಾಡಿದ್ದಾರೆ. ದೇಶದ ಮೂಲೆಮೂಲೆಯಲ್ಲಿ ಕಾಂಗ್ರೆಸ್‌ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ’ ಎಂದು ಹೇಳಿದರು.

ADVERTISEMENT

ಹಾರ್ಟ್‌ ಬರ್ನಿಂಗ್‌: ‘ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಬಹಳ ಮಂದಿ ಇದ್ದರು. ಸ್ಥಾನ ಸಿಗದವರಿಗೆ ಕೆಲ ಕಾಲ ಹಾರ್ಟ್‌ ಬರ್ನಿಂಗ್‌ (ಹೃದಯ ಸುಡಬಹುದು) ಆಗಬಹುದು, ಮುಂದೆ ಎಲ್ಲವೂ ಸರಿ ಹೋಗುತ್ತದೆ. ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಜೆಡಿಎಸ್‌ನ ಶಾಸಕರು ಬಿಜೆಪಿ ಸೇರಬಹುದು, ಸಿ.ಎಸ್‌.ಪುಟ್ಟರಾಜು ಸೇರಿ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ’ ಎಂದರು.

ಸೋತವರನ್ನು ಉಪಮುಖ್ಯಮಂತ್ರಿ ಮಾಡಿರುವ ಕುರಿತ ಪ್ರಶ್ನೆಗೆ, ಈ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಶಿವರಾಜ್‌ ಪಾಟೀಲ್‌ ಅವರನ್ನು ಕೇಂದ್ರದ ಗೃಹಸಚಿವರನ್ನಾಗಿ ನೇಮಕ ಮಾಡಿರಲಿಲ್ಲವೇ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.