ಮಂಡ್ಯ: ‘ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಲು ಡಿ.ಕೆ.ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರು ಮುಖ್ಯಮಂತ್ರಿ ಆಗಬೇಕು ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಅವರು ಸಿಎಂ ಆಗುವುದು ನಿಶ್ಚಿತ’ ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.
ಶುಕ್ರವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ‘ಪಕ್ಷಕ್ಕಾಗಿ ದುಡಿದ ಹಿರಿಯರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ. ಅದೇ ರೀತಿ ನಾವು ಕೂಡ ಸಿಎಂ ಆಗಲಿ ಎಂದು ಬಯಸುತ್ತೇವೆ. ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾಯ್ದು, ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ. ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಾವುದಕ್ಕೂ ಆತುರಪಡುವುದಿಲ್ಲ. ಸಂಯಮದಿಂದ ಪಕ್ಷವನ್ನು ಮುನ್ನಡೆಸಿ ಇಲ್ಲಿಯವರೆಗೆ ತಂದಿದ್ದಾರೆ’ ಎಂದರು.
ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು. ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕಾಗಿ ಕಾಂಗ್ರೆಸ್ಗೆ ಹೆಚ್ಚು ಸೀಟುಗಳು ಬಂದವು. ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತದೆ ಎಂಬುದನ್ನು ಕಾದು ನೋಡೋಣ. ದೇವರ ಅನುಗ್ರಹ ಅವರ ಮೇಲೆ ಇರಲಿ ಎಂದು ಶುಭ ಹಾರೈಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.