ADVERTISEMENT

ಗೈರಾದರೂ ಹಾಜರಾತಿ ಪುಸ್ತಕದಲ್ಲಿ ಸಹಿ: ವೈದ್ಯಾಧಿಕಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ವೈದ್ಯಾಧಿಕಾರಿ ವಿರುದ್ಧ ಹೊಳಲು ಗ್ರಾಮಸ್ಥರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 11 ಮೇ 2021, 16:33 IST
Last Updated 11 ಮೇ 2021, 16:33 IST
ಕೆರಗೋಡು ಸಮೀಪದ ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಕರ್ತವ್ಯಕ್ಕೆ ಗೈರಾಗಿಯೂ ವಾರಪೂರ್ತಿ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುತ್ತಿದ್ದ ಕ್ರಮಕ್ಕೆ ಗ್ರಾಮಸ್ಥರು ಪ್ರತಿಭಟಿಸಿದ ಮಾಹಿತಿ ತಿಳಿದು ಶಾಸಕ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ ಪರಿಶೀಲಿಸಿದರು
ಕೆರಗೋಡು ಸಮೀಪದ ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಕರ್ತವ್ಯಕ್ಕೆ ಗೈರಾಗಿಯೂ ವಾರಪೂರ್ತಿ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುತ್ತಿದ್ದ ಕ್ರಮಕ್ಕೆ ಗ್ರಾಮಸ್ಥರು ಪ್ರತಿಭಟಿಸಿದ ಮಾಹಿತಿ ತಿಳಿದು ಶಾಸಕ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ ಪರಿಶೀಲಿಸಿದರು   

ಕೆರಗೋಡು: ಮಂಡ್ಯ ತಾಲ್ಲೂಕಿನ ಹೊಳಲು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ
ಐದು ದಿನಗಳಿಂದ ಗೈರಾಗಿದ್ದು, ಗ್ರಾಮಸ್ಥರು ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಅವರ ವಿರುದ್ಧ ಕ್ರಮ ಜರುಗಿಸಿ ಬೇರೆ ವೈದ್ಯರನ್ನು ನಿಯೋಜಿಸಬೇಕು ಎಂದು ಶಾಸಕ ಸಿ.ಎಸ್.ಪುಟ್ಟರಾಜು ಟಿಎಚ್ಒಗೆ ಸೂಚನೆ ನೀಡಿದರು.

ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಅವರು ಮಾತನಾಡಿದರು.

ಟಿಎಚ್ಒ ಡಾ.ಜವರೇಗೌಡ ಮಾತನಾಡಿ, ವೈದ್ಯರ ಗೈರು ಹಾಜರಿ ಬಗ್ಗೆ ಇದೀಗ ಮಾಹಿತಿ ಲಭಿಸಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು, ಜಿಲ್ಲಾಧಿಕಾರಿ ಡಾ.ಎಸ್.ಅಶ್ವಥಿ, ಡಿಎಚ್ಒ ಡಾ.ಎಚ್.ಪಿ.ಮಂಚೇಗೌಡ ಅವರಿಗೆ ವರದಿ ಸಲ್ಲಿಸಲಾಗಿದೆ. ಅವರ ಉತ್ತರಕ್ಕಾಗಿ ಕಾಯುತ್ತಿರುವುದಾಗಿ ತಿಳಿಸಿದರು.

ADVERTISEMENT

5 ದಿನಗಳಿಂದ ಡಾ.ರವಿಕುಮಾರ್ ಆಸ್ಪತ್ರೆಗೆ ಬಾರದಿದ್ದರೂ ಹಾಜರಾತಿ ಪುಸ್ತಕದಲ್ಲಿ ಮೇ 11 ರವರೆಗೂ ಸಹಿ ಹಾಕಲಾಗಿತ್ತು. ಈ ಕ್ರಮವನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಮಾಹಿತಿ ಪಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಡಿ.ರವಿಕುಮಾರ್ ಮತ್ತು ಕೆಲ ಸದಸ್ಯರು ಆಸ್ಪತ್ರೆ ಬಳಿ ತೆರಳಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು ವೈದ್ಯರ ವಿರುದ್ಧ ಹಲವು ದೂರುಗಳು ಕೇಳಿ ಬರುತ್ತಿದ್ದು, ವೈದ್ಯರನ್ನು ಬದಲಿಸಲು ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯ ಅಭಿನಂದನ್ ಮಾತನಾಡಿ, ಕೋವಿಡ್ ಸಂದರ್ಭದಲ್ಲೂ ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಲಸಿಕೆ ಸಿಗುತ್ತಿಲ್ಲ. ಆಶಾ ಕಾರ್ಯಕರ್ತೆಯರಿಗೂ ಮಾಸ್ಕ್ ಸಿಗುತ್ತಿಲ್ಲ ಎಂದು ದೂರಿದರು.

ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಟಿಎಚ್‌ಒ ಡಾ.ಜವರೇಗೌಡ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.