ಮಳವಳ್ಳಿ/ಬೆಳಕವಾಡಿ: ‘ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಸತ್ತೇಗಾಲ ಕುಡಿಯುವ ನೀರಿನ ಯೋಜನೆಯು ಡಿಸೆಂಬರ್ ವೇಳೆಗೆ ಲೋಕಾರ್ಪಣೆಗೊಳ್ಳಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ತಾಲ್ಲೂಕಿನ ಬೆಳಕವಾಡಿ ಸಮೀಪದ ಸತ್ತೇಗಾಲ ಕಾವೇರಿ ನದಿ ಅಣೆಕಟ್ಟೆ ಬಳಿ ಸತ್ತೇಗಾಲ ಕುಡಿಯುವ ನೀರಿನ ಯೋಜನೆಯ ಪೈಪ್ಲೈನ್ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹಿಂದೆ ಸಚಿವರಾಗಿದ್ದಾಗ ಕಾವೇರಿ ನೀರಾವರಿ ನಿಗಮದ ವತಿಯಿಂದ ವಿಶೇಷ ಯೋಜನೆ ರೂಪಿಸಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಆದರೆ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ಪರಿಶೀಲಿಸಿದ ವೇಳೆ ನೀರು ಲಿಫ್ಟ್ ಮಾಡುವ ಜಾಗದ ವಿಚಾರದಲ್ಲಿ ಸಮಸ್ಯೆ ಉಂಟಾಗಿತ್ತು. ಇದೀಗ ಸಮಸ್ಯೆ ಬಗೆಹರಿದಿದೆ. ಯೋಜನೆಯಡಿ ಸುಮಾರು 26 ಕಿ.ಮೀ. ಯಾವುದೇ ಪಂಪ್ ಇಲ್ಲದೇ ಟನಲ್ ಲೈನಿಂಗ್ (ಸುರಂಗ ಮಾರ್ಗ) ಮೂಲಕ ನೀರು ಸರಾಗವಾಗಿ ಹರಿಯಲಿದೆ ಎಂದು ಹೇಳಿದರು.
ಅರ್ಧ ಕಿ.ಮೀ. ವ್ಯಾಪ್ತಿಯ ಕಾಮಗಾರಿ ಮಾತ್ರ ಬಾಕಿ ಉಳಿದಿದ್ದು, ನೀರು ಇಗ್ಗಲೂರು ಬ್ಯಾರೇಜ್ ತಲುಪಿದ ತಕ್ಷಣ ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ವ್ಯಾಪ್ತಿಯ ಕೆರೆಗಳು ಹಾಗೂ ಕುಡಿಯುವ ನೀರನ್ನು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ₹540 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. 3.3 ಟಿಎಂಸಿ ನೀರು ಪೂರೈಕೆಯಾಗಲಿದೆ ಎಂದು ಹೇಳಿದರು.
ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್, ಮದ್ದೂರು ಶಾಸಕ ಕೆ.ಎಂ.ಉದಯ್, ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ, ಸುಧಾಮ್ ದಾಸ್, ಮಾಜಿ ಸಂಸದ ಡಿ.ಕೆ. ಸುರೇಶ್, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ತಹಶೀಲ್ದಾರ್ ಎಸ್.ವಿ.ಲೋಕೇಶ್, ತಾ.ಪಂ.ಇಒ ಎಚ್.ಜಿ. ಶ್ರೀನಿವಾಸ್ ಇದ್ದರು.
ಇದಕ್ಕೂ ಮುನ್ನ ಮಳವಳ್ಳಿ ಪಟ್ಟಣಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪ್ರವಾಸಿ ಮಂದಿರ ಬಳಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು.
ರಾಮನಗರ ಜಿಲ್ಲೆಯ ಜನತೆಗೆ ಕುಡಿಯುವ ನೀರು, ಅಂತರ್ಜಲ ಹೆಚ್ಚಳ, ನೀರಾವರಿ ಉದ್ದೇಶಕ್ಕಾಗಿ 2018-19ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರು ₹540 ಕೋಟಿ ವೆಚ್ಚದಲ್ಲಿ ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳಿಗೆ ನೀರು ಪೂರೈಸುವ ಸತ್ತೇಗಾಲ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದರು.
ಮಹತ್ವಾಕಾಂಕ್ಷಿ ಯೋಜನೆಯ ಕೇವಲ 60 ಮೀಟರ್ ವಿಸ್ತೀರ್ಣದ ಪೈಪ್ಲೈನ್ ಕಾಮಗಾರಿಗೆ ರೈತರು ಭೂಮಿ ನೀಡಲು ವಿರೋಧಿಸುತ್ತಿರುವುದರಿಂದ ಯೋಜನೆ ಕುಂಟುತ್ತಾ, ತೆವಳುತ್ತಾ ಸಾಗಿತ್ತು. ಇದೀಗ ಸಮಸ್ಯೆ ಬಗೆಹರಿದಂತಾಗಿದೆ.
ಭವಿಷ್ಯದಲ್ಲಿ ಎದುರಾಗುವ ನೀರಿನ ಅಭಾವಕ್ಕೆ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ 2019ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಮಂಜೂರಾದ ಯೋಜನೆ ಇದಾಗಿದೆ.
ಕಾಮಗಾರಿ ಪರಿಶೀಲನೆ ವೇಳೆ ವಾಲ್ ಪಾಯಿಂಟ್ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ರೈತರು ಸೂಕ್ತ ಪರಿಹಾರ ಕೊಡಿಸುವಂತೆ ರೈತರು ಮನವಿ ಮಾಡಿದರು.
ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಯಾವುದೇ ಅನ್ಯಾಯವಾಗದಂತೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ ಅವರು, ಹಣವನ್ನು ವ್ಯರ್ಥ ಮಾಡದೆ ಬದಲಿ ಭೂಮಿ ಖರೀದಿಸುವಂತೆ ಸಲಹೆ ನೀಡಿದರು.
ಕಾಮಗಾರಿ ವೀಕ್ಷಣೆ ಮುನ್ನ ಬೆಳಕವಾಡಿಯ ಹಿರಿಯ ನಾಗರದಮ್ಮ(ಚಿಕ್ಕ ಮಾರಿಗುಡಿ) ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು ದೇವಸ್ಥಾನವನ್ನು ಪುನರ್ ನಿರ್ಮಾಣ ಮಾಡುವಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಅವರಿಗೆ ಸೂಚಿಸಿದರು.
ನಂತರ ಜವನಗಹಳ್ಳಿ ಗುಡ್ಡ ಬಳಿಯ ಕಾಮಗಾರಿಯ ಸುರಂಗ ಮಾರ್ಗ (ಟನಲ್) ಹಾಗೂ ಯೋಜನೆಯ ನೀಲನಕ್ಷೆಯನ್ನು ವೀಕ್ಷಣೆ ಮಾಡಿದರು. ಭೂಮಿ ಕಳೆದುಕೊಂಡ ಕೆಲ ರೈತರನ್ನು ಡಿ.ಕೆ. ಶಿವಕುಮಾರ್ ಅಭಿನಂದಿಸಿದರು.
ಸತ್ತೇಗಾಲ ಯೋಜನೆಯ ಬಗ್ಗೆ ಚನ್ನಪಟ್ಟಣ ಉಪ ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಕೆಲಸ ಮಾಡಿದ್ದೇವೆ. ಚನ್ನಪಟ್ಟಣ ಚುನಾವಣೆ ವೇಳೆ ನೀಡಿದ್ದ ಅನೇಕ ಭರವಸೆಗಳ ಚರ್ಚೆ ಮಾಡಲಾಗುವುದು. ಇಲ್ಲಿದ್ದ ಜಾಗದ ಸಮಸ್ಯೆ ಬಗೆಹರಿದಿದ್ದು, ಭೂಮಿ ಕಳೆದುಕೊಂಡ ರೈತರಿಗೆ ನೀಡಬೇಕಾದ ಪರಿಹಾರದ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಅಲ್ಲಿನ ಜನರಿಗೆ ಕುಡಿಯುವ ನೀರಿನ ಪೂರೈಕೆ ಮಾಡುವ ದೃಷ್ಟಿಯಿಂದ ಯೋಜನೆಯನ್ನು ಜಾರಿ ಮಾಡಿದ್ದು, ಇಡೀ ರಾಜ್ಯದಲ್ಲಿಯೇ ವಿಶಿಷ್ಟವಾದ ಯೋಜನೆ ಇದಾಗಿದೆ. ಈಗಾಗಲೇ ಕಣ್ವಾ ಜಲಾಶಯದಿಂದ ವೈ.ಜಿ. ಗುಡ್ಡ ಜಲಾಶಯಕ್ಕೆ ಪ್ರಾಯೋಗಿಕವಾಗಿ 23 ಕಿ.ಮೀ. ನೀರು ಹರಿಸಲಾಗಿದೆ. ಆದರೆ, ಕಣ್ವಾ ಜಲಾಶಯದಿಂದ ಮಂಚನಬೆಲೆ ಜಲಾಶಯಕ್ಕೆ ನೀರು ಹರಿಸಲಾಗುವುದು. ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಅಲ್ಲಿನ ಜನರಿಗೆ ಕುಡಿಯುವ ನೀರಿನ ಪೂರೈಕೆ ಮಾಡುವ ದೃಷ್ಟಿಯಿಂದ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.