ADVERTISEMENT

ಮಕ್ಕಳಿಂದ ದೇವೇಗೌಡರಿಗೆ ಮುಜುಗರ: ಎನ್‌.ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 14:20 IST
Last Updated 24 ಜನವರಿ 2024, 14:20 IST
ಎನ್‌. ಚಲುವರಾಯಸ್ವಾಮಿ
ಎನ್‌. ಚಲುವರಾಯಸ್ವಾಮಿ   

ಮಂಡ್ಯ: ‘ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂಬ ಕಠೋರ ಮಾತುಗಳನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಆಡಿದ್ದರು. ಜೀವನವಿಡೀ ಜಾತ್ಯತೀತ ವಾದವನ್ನು ಪಾಲಿಸಿದ್ದರು. ಆದರೆ, ಅವರ ಮಕ್ಕಳು ಕೋಮುವಾದಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ತಂದೆಗೆ ಮುಜುಗರ ತಂದಿದ್ದಾರೆ’ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ಇಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ‘ಮಾಜಿ ಪ್ರಧಾನಿ, ಮಣ್ಣಿನ ಮಗ ದೇವೇಗೌಡರು ನಮಗೆ ಮಾರ್ಗದರ್ಶಕರಾಗಿದ್ದರು. ಈಗ ಅವರು ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎಂದರೆ ನಮಗೆ ನೋವಾಗುತ್ತಿದೆ’ ಎಂದರು.

‘ಬಿಜೆಪಿಯವರು ಶ್ರೀರಾಮನನ್ನು ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ನಾವೂ ರಾಮಭಕ್ತರಾಗಿದ್ದು ನಿತ್ಯವೂ ಪೂಜೆ ಮಾಡುತ್ತೇವೆ. ಆದರೆ, ಪೂರ್ಣಗೊಳ್ಳದ ಶ್ರೀರಾಮಮಂದಿರವನ್ನು ರಾಜಕೀಯ ಲಾಭಕ್ಕಾಗಿ ಉದ್ಘಾಟಿಸಿ ದೇಶದ ಜನರನ್ನು ದಿಕ್ಕು ತಪ್ಪಿಸುವ ಯತ್ನ ಮಾಡಿದ್ದಾರೆ’ ಎಂದರು.

ADVERTISEMENT

‘ಲೋಕಸಭಾ ಚುನಾವಣೆಗಾಗಿ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಂತಿಮ ಹಂತದಲ್ಲಿದೆ. ಸ್ಥಳೀಯ ಮುಖಂಡರಿಗೆ ಆದ್ಯತೆ ನೀಡಬೇಕು ಎಂಬ ಕಾರಣಕ್ಕೆ ಅಭ್ಯರ್ಥಿ ಆಯ್ಕೆ ತಡವಾಗಿದೆ. ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮಗೊಳಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.