ADVERTISEMENT

2 ವಾರದೊಳಗೆ ಕಬ್ಬಿನ ಹಣ ಪಾವತಿಸಿ: ಸಚಿವ ಚಲುವರಾಯಸ್ವಾಮಿ ಸೂಚನೆ

ರೈತರೊಂದಿಗೆ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2025, 16:01 IST
Last Updated 18 ಫೆಬ್ರುವರಿ 2025, 16:01 IST
ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಕುರಿತ ಸಭೆಯಲ್ಲಿ ಪಾಲ್ಗೊಂಡಿದ್ದ ರೈತರು ಮತ್ತು ಅಧಿಕಾರಿಗಳು 
ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಕುರಿತ ಸಭೆಯಲ್ಲಿ ಪಾಲ್ಗೊಂಡಿದ್ದ ರೈತರು ಮತ್ತು ಅಧಿಕಾರಿಗಳು    

ಮಂಡ್ಯ: ‘ರೈತರು ನೀಡುವ ಕಬ್ಬಿನ ಮೇಲೆ ಸಕ್ಕರೆ ಕಾರ್ಖಾನೆಗಳು ನಡೆಯುತ್ತಿದ್ದು, ರೈತರಿಗೆ ಕಷ್ಟಗಳಿಗೆ ಸ್ಪಂದಿಸಿ 14 ದಿನದೊಳಗಾಗಿ ಕಬ್ಬು ಸರಬರಾಜು ಮಾಡುವ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಹಾಗೂ ರೈತರ ಸಭೆ ನಡೆಸಿ ಮಾತನಾಡಿದರು.

ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಅವರು ₹29 ಕೋಟಿ ರೈತರಿಗೆ ಪಾವತಿಸುವುದು ಬಾಕಿ ಇದೆ. ಪ್ರತಿ ವಾರ ₹4ರಿಂದ ₹5 ಕೋಟಿ ಹಣ ಪಾವತಿಸಿ. ಮಾಚ್೯ 15ರ ನಂತರ ಬಾಕಿ ಇದ್ದರೆ ಬಡ್ಡಿ ಸಮೇತ ವಸೂಲಿ ಮಾಡಿ ರೈತರಿಗೆ ನೀಡಲಾಗುವುದು ಎಂದರು.

ADVERTISEMENT

ಕೊಪ್ಪ‌ ಸಕ್ಕರೆ ಕಾರ್ಖಾನೆ ಅವರು ಬಾಕಿ ಇರುವ ₹7 ಕೋಟಿಯನ್ನು ಫೆಬ್ರವರಿ ಅಂತ್ಯದೊಳಗೆ‌ ಪಾವತಿಸುವಂತೆ ಸೂಚನೆ ನೀಡಿದರು. ಕಬ್ಬು ಕಟಾವಿಗೆ ಸಂಬಂಧಿಸಿದಂತೆ ಒಂದೊಂದು ರೀತಿಯಲ್ಲಿ ದರವನ್ನು ರೈತರಿಂದ ವಸೂಲಿ‌ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸಭೆ ನಡೆಸಿ ಏಕರೂಪ ದರ ನಿಗದಿಪಡಿಸಲಾಗುವುದು ಎಂದರು.

‘ರೈತರ ಜೀವನಾಡಿಯಾಗಿರುವ ಸಕ್ಕರೆ ಕಾರ್ಖಾನೆಯನ್ನು ಉಳಿಸಿ ಬೆಳೆಸಲು ಶ್ರಮಿಸುತ್ತಿದ್ದು, ರೈತರು ಮೈಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡಲಾಗುವುದೇ ಎಂದು ನನ್ನನ್ನು ಪ್ರಶ್ನಿಸಿದರೆ ನೋವಾಗುತ್ತದೆ’ ಎಂದರು.

ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ. ಗಂಗಾಧರ್ ಮಾತನಾಡಿ, ‘ಜೂನ್ ಎರಡನೇ ವಾರದಲ್ಲಿ ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದರು‌

ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಅವರು ರೈತರ ಕಬ್ಬು ನುರಿಸಿ 14 ದಿನ ಮೇಲ್ಪಟ್ಟರೂ 4 ಸಾವಿರ ರೈತರ ₹29 ಕೋಟಿ ಪಾವತಿಸಬೇಕಿದೆ. ಮಾರ್ಚ್‌ 15ರೊಳಗೆ ಪಾವತಿಸುವಂತೆ ನಿರ್ದೇಶನ ನೀಡಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹಾಜರಿದ್ದ ರೈತ ಮುಖಂಡರು, ‘ಕಬ್ಬು ಕಟಾವಿಗೆ ದರ ನಿಗದಿಯಾಗಬೇಕು. ಮೈಶುಗರ್ ಲಾಭ ನಷ್ಟ ಕುರಿತು ವರದಿ ನೀಡಬೇಕು’ ಎಂದು ಒತ್ತಾಯಿಸಿದರು.

ಸಭೆಯಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೇರಿದಂತೆ ರೈತ ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.