
ಶ್ರೀರಂಗಪಟ್ಟಣ: ತಾಲ್ಲೂಕಿನ ತಡಗವಾಡಿ ಗ್ರಾಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಸಂಜೀವಿನಿ ಶುಭೋದಯ ಮಹಿಳಾ ಒಕ್ಕೂಟದ ಸಹಯೋಗದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಶುಕ್ರವಾರ ‘ಆರ್ಥಿಕ ಸಾಕ್ಷರತಾ ಆಂದೋಲನ’ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ನಬಾರ್ಡ್ ಬ್ಯಾಂಕ್ ಡಿಡಿಎಂ ಹರ್ಷಿತಾ, ‘ಪ್ರತಿ ವ್ಯಕ್ತಿ ಸಮೀಪದ ಬ್ಯಾಂಕ್ಗಳಲ್ಲಿ ಖಾತೆ ತೆರೆಯಬೇಕು. ತಮ್ಮ ಆರ್ಥಿಕ ಸ್ಥಿತಿಗತಿಗೆ ತಕ್ಕಂತೆ ಹಣಕಾಸಿನ ವಹಿವಾಟು ನಡೆಸಬೇಕು. ಅರ್ಹರಿಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ಸಿಗಲಿದ್ದು, ಅದರಿಂದ ತಮ್ಮ ಚಟುವಟಿಕೆ ಹೆಚ್ಚಿಸಿಕೊಳ್ಳಬಹುದು. ಹಣವನ್ನು ಸೂಕ್ತ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ಆರ್ಥಿಕವಾಗಿ ಸಬಲರಾಗಬಹುದು’ ಎಂದು ಸಲಹೆ ನೀಡಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಗ್ರಾಮೀಣ ಪ್ರದೇಶದ ಜನರಲ್ಲಿ ಬ್ಯಾಂಕಿಂಗ್ ವ್ಯವಹಾರವನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ. ಹಣದ ಉಳಿತಾಯ ಮತ್ತು ಹೂಡಿಕೆಗೆ ಬ್ಯಾಂಕ್ಗಳು ನೆರವಾಗಲಿವೆ. ಬ್ಯಾಂಕ್ ಸಿಬ್ಬಂದಿ ಗ್ರಾಹಕರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು’ ಎಂದು ಹೇಳಿದರು.
ಹಣಕಾಸು ಸಾಕ್ಷರತೆ ಸಲಹೆಗಾರ ಸಗಾಯ್ ಆಂಟೋನಿ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಜನಧನ್ ಯೋಜನೆ, ಪ್ರಧಾನ ಮಂತ್ರಿ ಬಿಮಾ ಸುರಕ್ಷಾ ಯೋಜನೆ, ಜೀವನ ಜ್ಯೋತಿ ಬಿಮಾ ಯೋಜನೆ, ಆರೋಗ್ಯ ವಿಮೆ, ಜೀವ ವಿಮೆ ಮತ್ತು ಅಪಘಾತ ವಿಮೆಗಳ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮಹೇಶ್, ಸಂಜೀವಿನಿ ಶುಭೋದಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸುಮಿ ಮುದ್ದೇಗೌಡ, ಕೇರ್ ಇನ್ಶೂರೆನ್ಸ್ ಕಂಪೆನಿ ನವೀನ್ ಕುಮಾರ್, ಮುಖಂಡರಾದ ನಿಂಗೇಗೌಡ, ದಯಾನಂದಸ್ವಾಮಿ, ಶ್ರೀನಿವಾಸ್, ಪ್ರಭಾಕರ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಕೆರೆ ಶಾಖೆ ವ್ಯವಸ್ಥಾಪಕ ಶೇಖರ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.