ನಾಗಮಂಗಲ: ಎರಡು ದಿನಗಳಿಂದ ಏಕಾಏಕಿ ವಾಂತಿ, ಭೇದಿ, ಜ್ವರ ಮತ್ತು ಸುಸ್ತು ಕಾಣಿಸಿಕೊಂಡು ಒಂದೇ ಗ್ರಾಮದ ಸುಮಾರು 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಾಬಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಚಂದ್ರ ಅಗ್ರಹಾರ ಗ್ರಾಮದ 9 ಮಂದಿ ಗುರುವಾರ ರಾತ್ರಿ, ಇಬ್ಬರು ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಲ್ಲದೆ, ಬಿಂಡಿಗನವಿಲೆ ಸಮುದಾಯ ಆರೋಗ್ಯ ಕೇಂದ್ರದಲ್ಲೂ 6 ಮಂದಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಬಿಂಡಿಗನವಿಲೆ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಅಶೋಕ್, ಪಿಡಿಒ, ಆರೋಗ್ಯ ನಿರೀಕ್ಷಕರು ಮತ್ತು ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯ ವತಿಯಿಂದ ತಂಡಗಳನ್ನು ರಚಿಸಿ ಗ್ರಾಮದ ಪ್ರತಿ ಮನೆಗಳನ್ನು ಸಮೀಕ್ಷೆ ಮಾಡಲಾಗುತ್ತಿದೆ.
ಗ್ರಾಮದಲ್ಲಿ ಈ ರೀತಿ ಘಟನೆ ನಡೆದಿರುವುದು ಗಮನಕ್ಕೆ ಬಂದ ತಕ್ಷಣ ಗ್ರಾಮಕ್ಕೆ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ನಡೆಸಿ ಮಾಹಿತಿ ನೀಡಲು ಸೂಚಿಸಲಾಗಿದೆ. ಆಹಾರದಲ್ಲಿ ವ್ಯತ್ಯಾಸ ಉಂಟಾಗಿ ಜನ ಅಸ್ವಸ್ಥರಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಸದ್ಯ ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ್ ತಿಳಿಸಿದರು.
ಗ್ರಾಮವನ್ನು ಸ್ವಚ್ಛಗೊಳಿಸಲು ಕ್ರಮ ವಹಿಸುವಂತೆ ಪಿಡಿಒಗೆ ತಿಳಿಸ ಲಾಗಿದೆ. ಅಲ್ಲದೆ, ಗ್ರಾಮದಲ್ಲಿ ಕುಡಿ ಯುವ ನೀರಿನ ಪೈಪ್ ಒಡೆದು ನೀರು ಕಲುಷಿ ತವಾಗುತ್ತಿದೆ ಎಂದು ಜನರು ಗಮನಕ್ಕೆ ತಂದಿದ್ದಾರೆ. ಅದನ್ನೂ ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಕುಡಿಯುವ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.