
ಹಳೇಬೀಡು: 'ಮುಂಬರುವ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಸಂಘಟನೆ ಮಾಡಲಾಗುತ್ತಿದೆ. ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದಿಂದಲೇ ಕಾರ್ಯಕರ್ತರಿಗೆ ಶಕ್ತಿ ತುಂಬಲಾಗುತ್ತಿದೆ" ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದರು.
ಪಟ್ಟಣದಲ್ಲಿ ಭಾನುವಾರ ನಡೆದ ಜಾವಗಲ್-ಹಳೇಬೀಡು ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
‘ಪಕ್ಷದ ಬಲವರ್ಧನೆಗಾಗಿ ಬೂತ್ ಏಜೆಂಟರುಗಳನ್ನು ನೇಮಕ ಮಾಡಲಾಗುತ್ತಿದೆ. ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಪ್ರವಾಸ ನಡೆಸುತ್ತಿದ್ದೇವೆ. ಕಾರ್ಯಕರ್ತರಿಗೆ ಹತ್ತಿರದವರಾಗಿದ್ದು, ಅವರೊಂದಿಗೆ ಅಭಿವೃದ್ಧಿಯ ಕುರಿತು ಮಾತುಕಥೆ ನಡೆಸುತ್ತಿದ್ದೇವೆ’ ಎಂದರು.
‘ಬೇಲೂರು ವಿಧಾನ ಸಭಾ ಕ್ಷೇತ್ರದಲ್ಲಿ ವಿದ್ಯುತ್ ಪೂರೈಕೆಯ ಉನ್ನತೀಕರಣಕ್ಕಾಗಿ ₹133ಕೋಟಿ ಹಣ ಮಂಜೂರು ಮಾಡಿಸಿದ್ದೇವೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅಡಗೂರಿನಲ್ಲಿ ವಿದ್ಯುತ್ ವಿತರಣಾ ಕೇಂದ್ರ ಆರಂಭಿಸಲು 20 ಎಕರೆ ಜಾಗದ ಸರ್ವೆ ಕೆಲಸ ನಡೆಯುತ್ತಿದೆ ಎಂದರು.
ಹೆಬ್ಬಾಳು ಜಿಲ್ಲಾ ಪಂಚಾಯಿತಿ ಮುಖಂಡ ಎಚ್.ಬಿ.ಚಂದ್ರಶೇಖರ್ ಮಾತನಾಡಿ, ‘ಸಂಸದ ಶ್ರೇಯಸ್ ಪಟೇಲ್ ಹಾಗೂ ಮಾಜಿ ಸಚಿವ ಬಿ.ಶಿವರಾಂ ಬೇಲೂರು ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಇಬ್ಬರು ನಾಯಕರು ಜನರಿಗೆ ಹತ್ತಿರದಲ್ಲಿದ್ದು ಕೆಲಸ ಮಾಡುತ್ತಿರುವುದರಿಂದ ನಾವು ಕೇಳುವ ಅಭಿವೃದ್ಧಿ ಕೆಲಸ ಸರಾಗವಾಗಿ ಸಾಗುತ್ತಿವೆ’ ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ದೇಶಾಣಿ ಆನಂದ್ ಮಾತನಾಡಿದರು. ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್.ಶರತ್, ಕಾಂಗ್ರೆಸ್ ವೀಕ್ಷಕರಾದ ವಿಜಯ್ ಕುಮಾರ್, ಮುಖಂಡರಾದ ಬಿ.ಎಂ.ಸಂತೋಷ್, ಶಶಿಧರ, ಕೆ.ಎಂ.ವೀರಣ್ಣ, ಬಿ.ಎಲ್.ಕೊಪ್ಪಲು ಸುರೇಶ್, ಮಲ್ಲಾಪುರ ಯತೀಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.