ADVERTISEMENT

ಮದ್ದೂರು ನಗರಸಭೆಯಿಂದ ಗೆಜ್ಜಲಗೆರೆ ಕೈಬಿಡಲು ಮನವಿ

ಅನಿರ್ದಿಷ್ಟಾವಧಿ ಪ್ರತಿಭಟನೆ: ಮಾಜಿ ಸಚಿವರಾದ ಡಿ. ಸಿ ತಮ್ಮಣ್ಣ, ಅಶ್ವಥ್ ನಾರಾಯಣ್ ಬೆಂಬಲ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 5:34 IST
Last Updated 27 ಡಿಸೆಂಬರ್ 2025, 5:34 IST
ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಗೊಳಿಸಿರುವ ಕ್ರಮವನ್ನು ಖಂಡಿಸಿ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯ ಗ್ರಾ. ಪಂ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ ಹಾಗೂ ಅಶ್ವಥ್ ನಾರಾಯಣ್ ಅವರು ಶುಕ್ರವಾರ ಪಾಲ್ಗೊಂಡು ಬೆಂಬಲ ಸೂಚಿಸಿದರು 
ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಗೊಳಿಸಿರುವ ಕ್ರಮವನ್ನು ಖಂಡಿಸಿ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯ ಗ್ರಾ. ಪಂ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ ಹಾಗೂ ಅಶ್ವಥ್ ನಾರಾಯಣ್ ಅವರು ಶುಕ್ರವಾರ ಪಾಲ್ಗೊಂಡು ಬೆಂಬಲ ಸೂಚಿಸಿದರು    

ಮದ್ದೂರು: ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವ ಕ್ರಮವನ್ನು ಖಂಡಿಸಿ ತಾಲ್ಲೂಕಿನ ಗೆಜ್ಜಲಗೆರೆಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಐದು ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ ಹಾಗೂ ಅಶ್ವಥ್ ನಾರಾಯಣ್ ಅವರು ಶುಕ್ರವಾರ ಪಾಲ್ಗೊಂಡು ಬೆಂಬಲ ಸೂಚಿಸಿದರು.

ಈ ವೇಳೆ ಗೆಜ್ಜಲಗೆರೆ ಗ್ರಾ.ಪಂ. ಕಚೇರಿ ಬಳಿ ಸ್ಥಳೀಯ ಗ್ರಾಮಸ್ಥರು ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆಯಿಂದ ಕೈಬಿಡಿಸುವಂತೆ ಒತ್ತಾಯಿಸಿ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

‘ಸ್ಥಳೀಯ ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸದೆ ಮತ್ತು ಚುನಾಯಿತ ಪ್ರತಿನಿಧಿಗಳ ಗಮನಕ್ಕೆ ತಾರದೆ ಏಕಾಏಕಿ ನಗರಸಭೆಯನ್ನಾಗಿಸಲು ಮುಂದಾಗಿದ್ದು ಇದರಿಂದಾಗಿ ಸ್ಥಳೀಯ ನಿವಾಸಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುವಂತಾಗಲಿದ್ದು ಮತ್ತು ಮೂಲ ಸೌಲಭ್ಯಗಳು ವಂಚಿತವಾಗಬೇಕಾದ ಸ್ಥಿತಿ ನಿರ್ಮಾಣವಾಗಲಿದೆ’ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.

ADVERTISEMENT

ಆಶ್ರಯ ವಸತಿ ಯೋಜನೆ, ನರೇಗಾ, ಕೃಪಾಂಕ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳು ಕೈತಪ್ಪಲಿದ್ದು ಮತ್ತು ಆಸ್ತಿ ತೆರಿಗೆ ದುಪ್ಪಟವಾಗುವ ಜತೆಗೆ ಪ್ರತಿಯೊಂದಕ್ಕೂ ನಗರಸಭೆಯನ್ನೇ ಆಶ್ರಯಿಸಬೇಕಾದ ಸ್ಥಿತಿ ನಿರ್ಮಾಣವಾಗಲಿದ್ದು ಕೂಡಲೇ ತಮಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್, ಈ ಬಗ್ಗೆ ಮುಂದಿನ ದಿನಗಳಲ್ಲಿ ಸದನದಲ್ಲಿ ಚರ್ಚಿಸಿ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು.

ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಗಳಿದ್ದರೆ ತಾ.ಪಂ, ಜಿ.ಪಂ. ಅನುದಾನ ಬಿಡುಗಡೆಯಾಗಿ ಗ್ರಾಮಾಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಬಹುದಾಗಿದೆ. ಹತ್ತರಿಂದ ಹದಿನೈದು ಮಂದಿ ಅಧಿಕಾರ ಸಿಗಲಿದ್ದು ಆದರೆ ನಗರಸಭೆಯಾದರೆ ಕೇವಲ ಒಬ್ಬ ವ್ಯಕ್ತಿಗೆ ಅಧಿಕಾರ ಸಿಗಲಿದ್ದು ಗ್ರಾಮೀಣ ಭಾಗದ ಜನರಿಗೆ ಸಿಗಬೇಕಾದ ಅಧಿಕಾರವನ್ನು ಕಸಿದುಕೊಂಡಂತಾಗುತ್ತದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಇಂದ್ರೇಶ್, ಮನ್ ಮುಲ್ ನಿರ್ದೇಶಕ ಎಸ್. ಪಿ ಸ್ವಾಮಿ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್, ತಾ.ಪಂ. ಮಾಜಿ ಅಧ್ಯಕ್ಷ ಯೋಗೇಶ್, ರೈತ ನಾಯಕಿ ಸುನಂದ ಜಯರಾಮು, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ಮುಖಂಡರಾದ ಲಿಂಗಪ್ಪಾಜಿ, ಜಿ.ಎಸ್.ಶಂಕರ್, ಪ್ರಸನ್ನ, ಮೋಹನ್ ಸೇರಿದಂತೆ ಹಲವಾರು ಗ್ರಾಮಸ್ಥರು ಹಾಜರಿದ್ದರು.

ಜನಾಭಿಪ್ರಾಯದ ವಿರುದ್ಧವಾಗಿ ಯಾವುದೇ ನಿರ್ಣಯಗಳನ್ನು ಶಾಸಕರು ತೆಗೆದುಕೊಳ್ಳದೆ ನ್ಯಾಯಸಮ್ಮತವಾಗಿ ಜನರ ಅಹವಾಲುಗಳನ್ನು ಪರಿಗಣಿಸಬೇಕಿತ್ತು
– ಅಶ್ವತ್ಥ್ ನಾರಾಯಣ್, ಮಾಜಿ ಉಪಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.