ಕೆ.ಆರ್.ಪೇಟೆ: ಸಚಿವ ಕೆ.ಸಿ.ನಾರಾಯಣಗೌಡ ವಿರುದ್ಧ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬಹಿರಂಗವಾಗಿ ಸಮರ ಸಾರಿದ್ದಾರೆ.
ಸಚಿವರು ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿರುವ ಅವರು, ಕಾರ್ಯಕರ್ತರ ರಕ್ಷಣೆಗಾಗಿ ರಾಜ್ಯದಾದ್ಯಂತ ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ.
ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ‘ಮಂಡ್ಯ ಜಿಲ್ಲೆಯಲ್ಲಿ ಸಚಿವ ನಾರಾಯಣಗೌಡ ದರ್ಪ ತೋರುತ್ತಿದ್ದಾರೆ. ಅಧಿಕಾರಿಗಳನ್ನು ಬಳಸಿಕೊಂಡು ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ. ಏನೇನು ತೊಂದರೆಯಾಗಿದೆ ಎಂಬುದನ್ನು ಪಟ್ಟಿ ಮಾಡಲು ಸೂಚಿಸಿದ್ದೇನೆ. ಈ ಕುರಿತು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ಕಲ್ಲು ಗಣಿಗೆ ಅವಕಾಶ ಕೊಡಿ: ‘ನಮ್ಮ ಪಕ್ಷದ ಕಾರ್ಯಕರ್ತ ಎಚ್.ಟಿ.ಮಂಜು ನಡೆಸುತ್ತಿದ್ದ ಕಲ್ಲು ಗಣಿ ಚಟುವಟಿಕೆಗೆ ಸಚಿವರು ಅವಕಾಶ ನೀಡುತ್ತಿಲ್ಲ. ಗಣಿಗಾರಿಕೆಗೆ ಅವಕಾಶ ನೀಡುವಂತೆ ವಿವಿಧ ನ್ಯಾಯಾಲಯಗಳು ಆದೇಶಿಸಿವೆ. ಆದರೂ ಜಿಲ್ಲಾಧಿಕಾರಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡುತ್ತಿಲ್ಲ. ಅಧಿಕಾರಿಗಳು ಸಚಿವ ನಾರಾಯಣಗೌಡರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ’ ಎಂದು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.